ಸುದ್ದಿಒನ್,ಮೇ.15: ಈ ಬಾರಿ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಲು ವರುಣದೇವ ಸಜ್ಜಾಗಿದ್ದಾನೆ. ವಾಡಿಕೆಗಿಂತ ಮುಂಚಿತವಾಗಿಯೇ ದೇಶಕ್ಕೆ ಮುಂಗಾರು ಮಳೆ ಆಗಮಿಸಲಿದ್ದು, ಮೇ 26ರಂದು ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹಸಿರು ನಿಶಾನೆ ತೋರಿಸಿದೆ.
ಸಾಮಾನ್ಯವಾಗಿ ಪ್ರತಿವರ್ಷ ಜೂನ್ 1ರಂದು ಕೇರಳಕ್ಕೆ ಕಾಲಿಡುತ್ತಿದ್ದ ಮುಂಗಾರು, ಈ ಬಾರಿ ಒಂದು ವಾರ ಮುಂಚಿತವಾಗಿ ಅಂದರೆ ಮೇ 26ಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಿರುವ ಮುಂಗಾರು ಮಾರುತಗಳು, ಅಲ್ಲಿಂದ ಕೇರಳದತ್ತ ವೇಗವಾಗಿ ಚಲಿಸುತ್ತಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಸುಮಾರು ಒಂದು ವಾರದ ಬಳಿಕ ಕರ್ನಾಟಕಕ್ಕೆ ಮಳೆಯ ಸಿಂಚನವಾಗಲಿದೆ. ಅದರಂತೆ ಜೂನ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ. ಇದರಿಂದಾಗಿ ರೈತರು ಕೃಷಿ ಚಟುವಟಿಕೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ಇದು ಸೂಕ್ತ ಸಮಯವಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ, ಮುಂಗಾರು ಪೂರ್ವ ಮಳೆ ಈಗಾಗಲೇ ರಾಜ್ಯದ ಹಲವೆಡೆ ಅಬ್ಬರಿಸುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಶೇ. 50ಕ್ಕಿಂತ ಹೆಚ್ಚಿನ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ವಿಶೇಷವಾಗಿ ರಾಯಚೂರು, ಬಾಗಲಕೋಟೆ, ಧಾರವಾಡ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಮತ್ತು ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದೆ.


















