Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ; 4,000 ಕಾನ್ಸ್‌ ಟೇಬಲ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

---Advertisement---

ಬೆಂಗಳೂರು.ಜುಲೈ.04: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಬಯಸುವ ಯುವಜನತೆಗೆ ಗೃಹ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ತಾಂತ್ರಿಕ ಕಾರಣಗಳು ಹಾಗೂ ಪ್ರಮಾಣಪತ್ರಗಳ ಲಭ್ಯತೆಯ ವಿಳಂಬದಿಂದಾಗಿ ಕಂಗಾಲಾಗಿದ್ದ ಅಭ್ಯರ್ಥಿಗಳ ನೆರವಿಗೆ ಧಾವಿಸಿರುವ ಸರ್ಕಾರ, ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಇದರೊಂದಿಗೆ, ಈಗಾಗಲೇ ಅರ್ಜಿ ಸಲ್ಲಿಸುವಾಗ ತಪ್ಪು ಮಾಡಿರುವ ಅಭ್ಯರ್ಥಿಗಳಿಗೆ ವಿವರಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಸಹ ವಿಶೇಷ ಅವಕಾಶ ಕಲ್ಪಿಸಲಾಗಿದೆ.

ಈ ಹಿಂದೆ ಜುಲೈ 3ರವರೆಗೆ ಅರ್ಜಿ ಸಲ್ಲಿಕೆಗೆ ಹಾಗೂ ಜುಲೈ 4ರವರೆಗೆ ಶುಲ್ಕ ಪಾವತಿಸಲು ಅಂತಿಮ ಗಡುವು ನೀಡಲಾಗಿತ್ತು. ಆದರೆ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಹಾಗೂ ಯುವಕರು ಉದ್ಯೋಗಾವಕಾಶದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಅವಧಿಯನ್ನು ಜುಲೈ 8ರ ಸಂಜೆ 4:00 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಆತುರದಲ್ಲಿ ತಪ್ಪು ಮಾಹಿತಿ ನಮೂದಿಸಿ ಆತಂಕಗೊಂಡಿದ್ದ ಅಭ್ಯರ್ಥಿಗಳಿಗೆ ಗೃಹ ಸಚಿವರು ನಿರಾಳತೆ ತಂದಿದ್ದಾರೆ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಜುಲೈ 9 ರಿಂದ ಜುಲೈ 12ರವರೆಗೆ ಲಿಂಕ್ ಮುಕ್ತವಾಗಿರಲಿದ್ದು, ಅಭ್ಯರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಸಹಯೋಗದೊಂದಿಗೆ ಒಟ್ಟು 3,991 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಮಿಕ್ಕುಳಿದ ವೃಂದದ (Residual Parent Cadre) 3,395 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ (KK Cadre) 596 ಹುದ್ದೆಗಳು ಸೇರಿವೆ. ಪೊಲೀಸ್ ಇಲಾಖೆ ಸೇರಲು ರಾಜ್ಯದ ಯುವಜನತೆಯಲ್ಲಿ ಭಾರಿ ಉತ್ಸಾಹ ಕಂಡುಬಂದಿದ್ದು, ಮಿಕ್ಕುಳಿದ ವೃಂದಕ್ಕೆ ಈಗಾಗಲೇ 2.80 ಲಕ್ಷಕ್ಕೂ ಅಧಿಕ ಮತ್ತು ಕಲ್ಯಾಣ ಕರ್ನಾಟಕ ವೃಂದಕ್ಕೆ 59 ಸಾವಿರಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಇದು ಸರ್ಕಾರದ ಉದ್ಯೋಗ ಸೃಷ್ಟಿ ಮತ್ತು ಪಾರದರ್ಶಕ ನೇಮಕಾತಿ ಪ್ರಕ್ರಿಯೆಯ ಮೇಲಿರುವ ನಂಬಿಕೆಯನ್ನು ತೋರಿಸುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ತಂತ್ರಜ್ಞಾನ ಆಧಾರಿತ ಹಾಗೂ ಅತ್ಯಂತ ಪಾರದರ್ಶಕವಾಗಿ ಈ ನೇಮಕಾತಿ ನಡೆಯುತ್ತಿರುವುದರಿಂದ, ಅಭ್ಯರ್ಥಿಗಳು ಯಾವುದೇ ಆತಂಕವಿಲ್ಲದೆ ನಿಗದಿತ ಅವಧಿಯೊಳಗೆ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಗೃಹ ಸಚಿವರು ಕೋರಿದ್ದಾರೆ.

Join WhatsApp

Join Now

Join Telegram

Join Now