ಬೆಂಗಳೂರು: ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ನೆರವಾಗುವ ಉದ್ದೇಶದಿಂದ ಸರ್ಕಾರ ‘ಮುಖ್ಯಮಂತ್ರಿ ನೇಗಿಲ ಯೋಗಿ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲು ತೀರ್ಮಾನಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಡಿಸಿಎಂ ಜಿ. ಪರಮೇಶ್ವರ್ ಅವರು ಯೋಜನೆಯ ಪ್ರಮುಖ ವಿವರಗಳನ್ನು ಹಂಚಿಕೊಂಡಿದ್ದಾರೆ.ಕೃಷಿ ಚಟುವಟಿಕೆಗಳಲ್ಲಿ ಉಳುಮೆ ವೆಚ್ಚ ಸಣ್ಣ ರೈತರಿಗೆ ಹೆಚ್ಚಿನ ಹೊರೆಯಾಗುತ್ತಿದೆ. ಕೆಲ ರೈತರು ಟ್ರ್ಯಾಕ್ಟರ್ ಹೊಂದಿದ್ದರೂ, ಎಲ್ಲ ರೈತರಿಗೆ ಯಂತ್ರೋಪಕರಣಗಳ ಸೌಲಭ್ಯ ಸಿಗುವುದಿಲ್ಲ. ಈ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಸರ್ಕಾರವೇ ರೈತರ ಜಮೀನನ್ನು ಉಚಿತವಾಗಿ ಉಳುಮೆ ಮಾಡಿಸಿಕೊಡಲು ಮುಂದಾಗಿದೆ.
ಮೂರು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಯೋಜನೆಯಡಿ ಆದ್ಯತೆ ನೀಡಲಾಗುತ್ತದೆ. ರೈತರ ಜಮೀನು ಉಳುಮೆ ಮಾಡಲು ಬಳಸುವ ಟ್ರ್ಯಾಕ್ಟರ್ಗಳಿಗೆ ಸರ್ಕಾರವೇ ಬಾಡಿಗೆ ಮೊತ್ತವನ್ನು ಪಾವತಿಸಲಿದೆ.ಕೆಲವು ಪ್ರದೇಶಗಳಲ್ಲಿ ಸ್ಥಳೀಯವಾಗಿ ಟ್ರ್ಯಾಕ್ಟರ್ ಅಥವಾ ಕೃಷಿ ಯಂತ್ರೋಪಕರಣಗಳ ಕೊರತೆ ಕಂಡುಬಂದರೆ, ಸರ್ಕಾರವೇ ಪರ್ಯಾಯವಾಗಿ ಅಗತ್ಯ ಯಂತ್ರೋಪಕರಣಗಳನ್ನು ಒದಗಿಸುವ ವ್ಯವಸ್ಥೆ ಮಾಡಲಿದೆ.
‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆಯನ್ನು ಮೊದಲ ಹಂತದಲ್ಲಿ ರಾಜ್ಯದ 31 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲು ನಿರ್ಧರಿಸಲಾಗಿದೆ. ಯೋಜನೆಯ ಅನುಷ್ಠಾನದ ಅನುಭವವನ್ನು ಆಧರಿಸಿ ಮುಂದಿನ ದಿನಗಳಲ್ಲಿ ರಾಜ್ಯದ ಇತರ ತಾಲೂಕುಗಳಿಗೂ ವಿಸ್ತರಿಸುವ ಉದ್ದೇಶ ಸರ್ಕಾರಕ್ಕಿದೆ.
ಈ ಯೋಜನೆಯಿಂದ ಸಣ್ಣ ರೈತರ ಕೃಷಿ ವೆಚ್ಚ ಕಡಿಮೆಯಾಗುವುದರ ಜೊತೆಗೆ, ಬೆಳೆ ಬೆಳೆಯುವ ಅವಧಿಗೆ ಅನುಗುಣವಾಗಿ ಸಮಯಕ್ಕೆ ಸರಿಯಾಗಿ ಉಳುಮೆ ಕಾರ್ಯ ಪೂರ್ಣಗೊಳಿಸಲು ನೆರವಾಗಲಿದೆ ಎಂದು ಸರ್ಕಾರ ನಿರೀಕ್ಷಿಸಿದೆ.










