ಬೆಂಗಳೂರು.ಸೆಪ್ಟೆಂಬರ್.12: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಮಹತ್ವದ ಕೊಡುಗೆ ನೀಡಿದ್ದು, ರಾಜ್ಯದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉಚಿತ ಬಸ್ ಪಾಸ್ ಸೌಲಭ್ಯ ಒದಗಿಸುವುದಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳ ಪೋಷಕರ ಮೇಲಿನ ಶೈಕ್ಷಣಿಕ ವೆಚ್ಚದ ಹೊರೆಯನ್ನು ತಗ್ಗಿಸುವ ಹಾಗೂ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.
ಆನ್ಲೈನ್ ಅರ್ಜಿ ಸಲ್ಲಿಕೆ: ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಿಂದಲಾದರೂ ಸುಲಭವಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಶುಲ್ಕ ಮರುಪಾವತಿ: ಈಗಾಗಲೇ ಶುಲ್ಕ ಪಾವತಿಸಿ ಪಡೆದುಕೊಂಡಿರುವ ಬಸ್ ಪಾಸ್ಗಳು ಎಂದಿನಂತೆ ಚಾಲ್ತಿಯಲ್ಲಿರಲಿವೆ. ವಿದ್ಯಾರ್ಥಿಗಳು ಈ ಹಿಂದೆ ಪಾವತಿಸಿರುವ ಸಂಪೂರ್ಣ ಮೊತ್ತವನ್ನು 15 ದಿನಗಳ ಒಳಗಾಗಿ ಮರುಪಾವತಿಸಲು (ರೀಫಂಡ್) ಸಾರಿಗೆ ನಿಗಮಗಳಿಗೆ ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ.
ಗಡಿಭಾಗದ ವಿದ್ಯಾರ್ಥಿಗಳಿಗೂ ಅನ್ವಯ
ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು.
ನೆರೆ ರಾಜ್ಯಗಳ ಗಡಿಭಾಗದಲ್ಲಿ ವಾಸವಿದ್ದು, ಕರ್ನಾಟಕದ ವ್ಯಾಪ್ತಿಯ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಈ ಉಚಿತ ಬಸ್ ಪಾಸ್ ಸೌಲಭ್ಯ ಅನ್ವಯವಾಗಲಿದೆ.
ವಿದ್ಯಾರ್ಥಿಗಳ ಶಿಕ್ಷಣದ ಕನಸಿಗೆ ವೇಗ ನೀಡಿ, ಕುಟುಂಬಗಳ ಆರ್ಥಿಕ ಹೊರೆಯನ್ನು ಇಳಿಸುವ ನಿಟ್ಟಿನಲ್ಲಿ ಈ ಐತಿಹಾಸಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.











