ಸುದ್ದಿಒನ್, ಚಿತ್ರದುರ್ಗ, ಜನವರಿ, 19 : ಸರ್ಕಾರಿ ಕಾಮಗಾರಿಗಳಿಗೆ ಸಾರಿಗೆ ಅಧಿಕಾರಿಗಳಿಂದ ತಡೆ ಬೇಡ ಎಂದು ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿ, ಮರಳು, ಕಾಂಕ್ರಿಟ್ ಮತ್ತಿತರೆ ಸಾಮಗ್ರಿಗಳನ್ನು ಸಾಗಿಸುವ ಲಾರಿಗಳನ್ನು ತಡೆದು, ವಿವಿಧ ಕಾರಣಗಳನ್ನು ಒಡ್ಡಿ ಪ್ರಾದೇಶಿಕ ಸಾರಿಗೆ ಇಲಾಖೆ ಇನ್ಸ್ಪೆಕ್ಟರ್ ಗಳು ದಂಡ ವಿಧಿಸುವುದು ಸೇರಿದಂತೆ ಅಡೆ ತಡೆ ಮಾಡುತ್ತಿದ್ದಾರೆ. ಈ ರೀತಿ ಮಾಡುವುದರಿಂದ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಗೆ ಕುಂಠಿತವಾಗುತ್ತದೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳಿಸಿಂಘೆ ಅವರು, ಈ ಕುರಿತು ಪರಿಶೀಲಿಸಿ, ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.


