ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 01 : ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತೆಂಟು ವರ್ಷಗಳು ಕಳೆದಿದ್ದರೂ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಶೋಷಿತರ ಬದುಕು ಇನ್ನು ಸುಧಾರಣೆಯಾಗಿಲ್ಲ. ಎಲ್ಲಾ ಪಕ್ಷಗಳು ಅವರ ಮೇಲೆ ಇವರು, ಇವರ ಮೇಲೆ ಅವರು ಆಪಾದನೆಗಳನ್ನು ಮಾಡಿಕೊಂಡು ಕಾಲ ಕಳೆಯುತ್ತಿರುವುದರಿಂದ ಪರ್ಯಾಯ ಪಕ್ಷವೊಂದನ್ನು ಕಟ್ಟಬೇಕಿದೆ ಎಂದು ಆಲ್ ಇಂಡಿಯಾ ಬಿ.ಎಸ್.ಪಿ.ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.

ನವ ಕರ್ನಾಟಕ ನಿರ್ಮಾಣ ಆಂದೋಲನ ವತಿಯಿಂದ ತ.ರಾ.ಸು.ರಂಗಮಂದಿರದಲ್ಲಿ ಶನಿವಾರ ನಡೆದ ಜನರ ನಡುವೆ ಜನತಾ ಪ್ರಣಾಳಿಕೆ ಚರ್ಚೆ ಉದ್ಗಾಟಿಸಿ ಮಾತನಾಡಿದರು.
ಬಡವರು ಸ್ವಾಭಿಮಾನದಿಂದ ಬದುಕಲು ಏನು ಬೇಕೋ ಅದನ್ನು ಕೊಡುವ ಬದಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ಉಚಿತ ಗ್ಯಾರೆಂಟಿಗಳನ್ನು ನೀಡಿ ಯಾಮಾರಿಸುತ್ತಿದ್ದಾರೆ. ಎಸ್ಪಿಪಿ. ಟಿಎಸ್ಪಿ. ಹಣವನ್ನು ಬೇರೆ ಬೇರೆ ಕಾಮಗಾರಿಗಳಿಗೆ ಬಳಸಲಾಗುತ್ತಿದೆ. ಅಟ್ರಾಸಿಟಿ ಜಾಸ್ತಿಯಾಗುತ್ತಿದೆ. ಮೀಸಲಾತಿ ಹೋಗಿದೆ.
ಅನಾದಿ ಕಾಲದಿಂದಲೂ ಜೀವನೋಪಾಯಕ್ಕಾಗಿ ಭೂಮಿಗಳನ್ನು ಸಾಗುವಳಿ ಮಾಡಿಕೊಂಡು ಬರುತ್ತಿರುವವರಿಗೆ ಹಕ್ಕುಪತ್ರಗಳು ಸಿಗುತ್ತಿಲ್ಲ. 33 ಸಾವಿರ ಹಳ್ಳಿಗಳ ಪೈಕಿ ಹನ್ನೊಂದು ಸಾವಿರ ಹಳ್ಳಿಗಳಲ್ಲಿ ಸ್ಮಶಾನಕ್ಕೆ ಇನ್ನು ಜಾಗವಿಲ್ಲದಂತಾಗಿದೆ. ಚುನಾವಣೆಯಲ್ಲಿ ಮತದಾರರಿಗೆ ಆಸೆ ಆಮಿಷಗಳನ್ನು ತೋರಿಸಿ ಗೆದ್ದು ಹೋದವರು ಯಾರ ಕೈಗೂ ಸಿಗುತ್ತಿಲ್ಲ. ಅದಕ್ಕಾಗಿ ದಲಿತ ಸಂಘಟನೆಗಳು, ರೈತರು, ವಿವಿಧ ಹೋರಾಟಗಾರರು, ಮಹಿಳೆಯರು, ವಿದ್ಯಾರ್ಥಿಗಳು ಎಲ್ಲರೂ ಒಂದುಗೂಡಿ ಪರ್ಯಾಯ ಪಕ್ಷ ರಚನೆಗೆ ಕೈಜೋಡಿಸಿ ಎಂದು ಮನವಿ ಮಾಡಿದರು.
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ ರಾಜ್ಯ ಸರ್ಕಾರ ಐದು ಉಚಿತ ಗ್ಯಾರೆಂಟಿಗಳನ್ನು ಕೊಟ್ಟಿರುವುದರಿಂದ ಸರ್ಕಾರ ದಿವಾಳಿಯಾಗಿದೆ. ಜನರ ಆಶೋತ್ತರಗಳಿಗೆ ಉತ್ತರ ಕೊಡಲು ಆಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶಕ್ಕೆ ಅನ್ನ ಕೊಡುವ ರೈತ ಸಾಲದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಹಳ್ಳಿ ಹಳ್ಳಿಗೆ ಹೋಗಿ ಜನರನ್ನು ಜಾಗೃತಿಗೊಳಿಸಬೇಕಿದೆ. ವಿರೋಧ ಪಕ್ಷ ನಿತ್ರಾಣಗೊಂಡಿರುವುದರಿಂದ ಆಡಳಿತ ಪಕ್ಷದ ಅಕ್ರಮಗಳನ್ನು ಪ್ರಶ್ನಿಸಲು ಆಗುತ್ತಿಲ್ಲ ಎಂದು ಟೀಕಿಸಿದರು.
ಆರ್.ಪಿ.ಐ. ರಾಷ್ಟ್ರೀಯ ಅಧ್ಯಕ್ಷ ಎನ್.ಮೂರ್ತಿ ಮಾತನಾಡುತ್ತ ಗಾಂಧಿ ಯುಗ ಮುಗಿಯಿತು. ಅಂಬೇಡ್ಕರ್ ಯುಗ ಆರಂಭಗೊಂಡಿದೆ. ಎಲ್ಲಾ ಸಂಘಟನೆಗಳು ಒಂದಾಗಿ ಹಳ್ಳಿ ಹಳ್ಳಿಗೆ ತಿರುಗಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್. ನ ಕುತಂತ್ರಗಳನ್ನು ಜನರಿಗೆ ತಿಳಿಸಬೇಕಿದೆ. ಹನ್ನೆರಡು ಕೋಟಿ ಮಕ್ಕಳು ಶಾಲೆಯಿಂದ ಹೊರಗಿದ್ದಾರೆ. ಒಂಬತ್ತು ಕೋಟಿ ಮಕ್ಕಳು ಅನ್ನವಿಲ್ಲದೆ ಬೀದಿಯಲ್ಲಿದ್ದಾರೆ. ಮೂವತ್ತು ಕೋಟಿ ನಿರುದ್ಯೋಗಿಗಳಿದ್ದಾರೆ. ಅದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಪರ್ಯಾಯ ಪಕ್ಷ ಕಟ್ಟುವ ಅಗತ್ಯವಿದೆ ಎಂದು ಹೇಳಿದರು.
ಮಾಜಿ ಶಾಸಕ ಹೆಚ್.ಡಿ.ಬಸವರಾಜ್ ಮಾತನಾಡಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್. ಅಟ್ಟಹಾಸ ಮಿತಿ ಮೀರಿದೆ. ಜನರಿಂದ ಮತ ಪಡೆದು ವಂಚಿಸುತ್ತಿರುವವರನ್ನು ಒದ್ದು ಓಡಿಸಬೇಕಾಗಿರುವುದರಿಂದ ಪರ್ಯಾಯ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರು.
ಆಲ್ ಇಂಡಿಯಾ ಬಿ.ಎಸ್.ಪಿ. ರಾಷ್ಟ್ರೀಯ ಸಂಯೋಜಕ ಎಂ.ಗೋಪಿನಾಥ್ ಮಾತನಾಡುತ್ತ ದಲಿತರು, ಹಿಂದುಳಿದವರು, ಅಸ್ಪøಶ್ಯರು, ಹೋರಾಟಗಾರರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ನಿರುದ್ಯೋಗ ಜಾಸ್ತಿಯಾಗಿದೆ. ರೈತರ ಆತ್ಮಹತ್ಯೆ ನಿಂತಿಲ್ಲ. ಕನ್ನಡ ನಾಡು, ನುಡಿ, ನೆಲ, ಜಲದ ಉಳಿವಿಗಾಗಿ ಹೊಸ ಪಕ್ಷ ಕಟ್ಟುವ ಕಾಲ ಬಂದಿದೆ. ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿರುವ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಲ್ಲಿ ಜನ ನೆಮ್ಮದಿಯಿಂದ ಬದುಕುತ್ತಿದ್ದಾರೆ. ಅಂತಹ ವಾತಾವರಣ ನಮ್ಮ ರಾಜ್ಯದಲ್ಲಿ ಸೃಷ್ಠಿಯಾಗಬೇಕೆಂದು ನುಡಿದರು.
ಆಲ್ ಇಂಡಿಯಾ ಬಿ.ಎಸ್.ಪಿ. ಜಿಲ್ಲಾಧ್ಯಕ್ಷ ಎನ್.ಪ್ರಕಾಶ್, ರಾಜ್ಯ ಕಾರ್ಯದರ್ಶಿಗಳಾದ ದೊಡ್ಡೆಟ್ಟಪ್ಪ, ನವೀದ್, ರೈತ ಮುಖಂಡ ರೆಡ್ಡಿಹಳ್ಳಿ ವೀರಣ್ಣ, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಾಂತೇಶ್ ಕೂನಬೇವು, ಭೀಮನಕೆರೆ ಶಿವಮೂರ್ತಿ, ಸಿ.ಪಿ.ಐ. ಜಿಲ್ಲಾ ಸಹ ಕಾರ್ಯದರ್ಶಿ ದೊಡ್ಡುಳ್ಳಾರ್ತಿ ಕರಿಯಣ್ಣ ಇನ್ನು ಅನೇಕರು ವೇದಿಕೆಯಲ್ಲಿದ್ದರು.


