ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದು ಬಂದ ಹಿನ್ನೆಲೆಯಲ್ಲಿ ಭೋವಿ ಗುರುಪೀಠದ ವತಿಯಿಂದ ಸೆ.13ರಂದು ಬೆಳಿಗ್ಗೆ 9 ಗಂಟೆಗೆ ಗೋನೂರು ಕೆರೆಗೆ ನೀರು ಸೇರುವ ಸ್ಥಳದಲ್ಲಿ ‘ಭದ್ರೆಗೆ ಬೃಹತ್ ಸಿಹಿ ಸಂಭ್ರಮ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ವತಿಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು ಒಂದು ಲಕ್ಷ ಜನರಿಗೆ ಸಿಹಿ ವಿತರಿಸುವ ಮೂಲಕ ಭದ್ರಾ ನೀರನ್ನು ಸಂಭ್ರಮದಿಂದ ಸ್ವಾಗತಿಸಲಾಗುವುದು.
ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ. ಗೋವಿಂದಪ್ಪ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ , ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಭಾಗವಹಿಸಲಿದ್ದಾರೆ.
ದಾಸೋಹ ಸೇವಾರ್ಥಿಗಳಾಗಿ ಹೊಳಲ್ಕೆರೆಯ ಹನುಮಂತಪ್ಪ ಗೋಡೆಮನೆ, ಚಳ್ಳಕೆರೆಯ ಎಚ್. ಆಂಜನೇಯ ಹಾಗೂ ಚಿತ್ರದುರ್ಗದ ಕಾರ್ಯನಿರ್ವಾಹಕ ಅಧಿಕಾರಿ ವೈ. ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ.
ಚಿತ್ರದುರ್ಗ ಜಿಲ್ಲಾ ಮತ್ತು ತಾಲ್ಲೂಕು ಭೋವಿ ಸಂಘ, ಎಸ್ಜೆಎಸ್ ಜ್ಞಾನಪೀಠ, ನೀರಾವರಿ ಹೋರಾಟಗಾರರು, ಪತ್ರಕರ್ತರು ಹಾಗೂ ಜಿಲ್ಲೆಯ ಸಮಸ್ತ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಭೋವಿ ಗುರುಪೀಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












