ಚಿತ್ರದುರ್ಗ. ಜೂನ್20: ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಆಯುಷ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಯೋಗ ನಡಿಗೆ ಜಾಥಾ’ಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯ ನಿರ್ಲಕ್ಷಿಸಿ ಆಸ್ತಿ, ಹಣದ ಬೆನ್ನತ್ತುತ್ತಿದ್ದಾರೆ. ಕೊನೆಗೆ ಅದೇ ಆರೋಗ್ಯ ಕಾಪಾಡಿಕೊಳ್ಳಲು ಸಂಪಾದಿಸಿದ ಹಣವನ್ನೆಲ್ಲ ಕಳೆದುಕೊಂಡು ಎರಡನ್ನೂ ಕಳೆದುಕೊಳ್ಳುವಂತಹ ವಿಷಾದನೀಯ ಪರಿಸ್ಥಿತಿಯಲ್ಲಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಇಂದು ಯೋಗವು ಕೇವಲ ಒಂದು ದೇಶಕ್ಕೆ ಸೀಮಿತವಾಗಿರದೆ, ರಾಷ್ಟ್ರಗಳ ಗಡಿ ಮೀರಿ ಅಂತರರಾಷ್ಟ್ರೀಯ ಮಟ್ಟದಲ್ಲಿ ತನ್ನ ಅಸ್ತಿತ್ವ ಮತ್ತು ವಿಶಿಷ್ಟತೆಯನ್ನು ಸಾಬೀತುಪಡಿಸಿದೆ. ಪ್ರತಿಯೊಬ್ಬರಿಗೂ ಆರೋಗ್ಯವೇ ನಿಜವಾದ ಭಾಗ್ಯ. ಮನುಷ್ಯ ಉತ್ತಮ ಸಾಮಾಜಿಕ ಜೀವಿಯಾಗಿ ಬದುಕಲು ಯೋಗವು ಅತ್ಯಂತ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು.
ಪ್ರತಿಯೊಬ್ಬರೂ ದಿನನಿತ್ಯ ಯೋಗ ಮಾಡುವುದರ ಜೊತೆಗೆ, ತಮ್ಮ ಕುಟುಂಬದ ಇತರ ಸದಸ್ಯರನ್ನೂ ಇದರಲ್ಲಿ ತೊಡಗಿಸಬೇಕು. ಆ ಮೂಲಕ ಪ್ರತಿಯೊಂದು ಕುಟುಂಬವೂ ಯೋಗ ಕುಟುಂಬವಾಗಿ ಮಾರ್ಪಡಬೇಕು ಎಂದು ಅವರು ಸಲಹೆ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ್ ನಾಗಸಮುದ್ರ ಅವರು ಅಂತರ ರಾಷ್ಟ್ರೀಯ ಯೋಗ ದಿನದ ಮಹತ್ವ ಹಾಗೂ ದೈಹಿಕ-ಮಾನಸಿಕ ಆರೋಗ್ಯದ ಮೇಲೆ ಯೋಗ ಬೀರಬಹುದಾದ ಸಕಾರಾತ್ಮಕ ಪ್ರಭಾವಗಳ ಕುರಿತು ಮಾತನಾಡಿದರು. ಯೋಗವು ಕೇವಲ ವ್ಯಾಯಾಮವಲ್ಲ, ಅದು ಜೀವನ ನಡೆಸುವ ಅತ್ಯುತ್ತಮ ಪದ್ಧತಿಯಾಗಿದೆ ಎಂದರು.
ಆಯುಷ್ ವೈದ್ಯಾಧಿಕಾರಿ ಡಾ.ನಾರದಮುನಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ಮತ್ತು ಉಪಯೋಗಗಳ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರಾರಂಭಗೊಂಡ ಬೃಹತ್ ಜಾಗೃತಿ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದವರೆಗೆ ಸಾಗಿ ಮುಕ್ತಾಯಗೊಂಡಿತು.
ಯೋಗ ನಡಿಗೆ ಜಾಥಾದಲ್ಲಿ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು, ವಿವಿಧ ಯೋಗ ಸಂಸ್ಥೆಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು, ಆಯುಷ್ ಇಲಾಖೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ 500ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













