ಕೃಷಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಲಕ್ಷಾಂತರ ರೈತರಿಗೆ ಮಹಾರಾಷ್ಟ್ರ ಸರ್ಕಾರದಿಂದ ಮಹತ್ವದ ಸಿಹಿಸುದ್ದಿ ಸಿಕ್ಕಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಹುನಿರೀಕ್ಷಿತ ರೈತರ ಸಾಲಮನ್ನಾ ಯೋಜನೆಗೆ ಅನುಮೋದನೆ ದೊರೆತಿದ್ದು, 56 ಲಕ್ಷಕ್ಕೂ ಅಧಿಕ ರೈತ ಕುಟುಂಬಗಳಿಗೆ ಇದರ ಲಾಭ ದೊರೆಯುವ ನಿರೀಕ್ಷೆಯಿದೆ.
ಬಜೆಟ್ನಲ್ಲಿ ಘೋಷಿಸಲಾಗಿದ್ದ ಸಾಲಮನ್ನಾ ಯೋಜನೆಗೆ ಇದೀಗ ಆಡಳಿತಾತ್ಮಕ ಮುದ್ರೆ ಬಿದ್ದಿದ್ದು, ರಾಜ್ಯದ ರೈತ ಸಮುದಾಯದಲ್ಲಿ ಸಂತಸ ಮೂಡಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅಂತಿಮ ಒಪ್ಪಿಗೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಸರ್ಕಾರದ ಮೂಲಗಳ ಪ್ರಕಾರ, ರೈತರ ಸಾಲಮನ್ನಾ ಯೋಜನೆಗಾಗಿ ₹36,585 ಕೋಟಿ ಮೊತ್ತವನ್ನು ಮೀಸಲಿಡಲಾಗಿದೆ. ಈ ಯೋಜನೆಯಡಿ ರಾಜ್ಯದ ಸುಮಾರು 65 ಲಕ್ಷ ಸಾಲ ಖಾತೆಗಳು ಮುಕ್ತವಾಗಲಿದ್ದು, 56 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳು ಸಾಲದ ಹೊರೆಯಿಂದ ಪರಿಹಾರ ಪಡೆಯಲಿವೆ.ಸಚಿವ ಸಂಪುಟದಿಂದ ಅನುಮೋದನೆ ದೊರೆತಿದ್ದರೂ ಸರ್ಕಾರ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗದ ನಿಯಮಗಳನ್ನು ಪಾಲಿಸುವ ಉದ್ದೇಶದಿಂದ ಸರ್ಕಾರ ಅಧಿಕೃತ ಪ್ರಕಟಣೆ ನೀಡಿಲ್ಲ ಎಂದು ತಿಳಿದುಬಂದಿದೆ.
ಆದರೆ, ಯೋಜನೆಗೆ ಸಂಬಂಧಿಸಿದ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ನೀತಿ ಸಂಹಿತೆ ಮುಕ್ತಾಯವಾದ ಬಳಿಕ ಅಧಿಕೃತ ಘೋಷಣೆ ಸಾಧ್ಯತೆ ಇದೆ.
ಇನ್ನೊಂದೆಡೆ, ರೈತ ಸಂಘಟನೆಗಳು ಸಾಲಮನ್ನಾ ಯೋಜನೆಯನ್ನು ವಿಳಂಬ ಮಾಡದೆ ತಕ್ಷಣ ಜಾರಿಗೆ ತರಬೇಕು ಎಂದು ಆಗ್ರಹಿಸಿವೆ. ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ನಾಯಕ ಹಾಗೂ ಮಾಜಿ ಸಂಸದ ರಾಜು ಶೆಟ್ಟಿ, “ವಿಧಾನ ಪರಿಷತ್ ಚುನಾವಣೆ ಮತ್ತು ಸಾಲಮನ್ನಾ ಯೋಜನೆಗೆ ಯಾವುದೇ ಸಂಬಂಧವಿಲ್ಲ. ಸರ್ಕಾರದ ಕಾರಣ ಸಮಂಜಸವಲ್ಲ” ಎಂದು ಟೀಕಿಸಿದ್ದಾರೆ.ಅಖಿಲ ಭಾರತೀಯ ಕಿಸಾನ್ ಸಭಾ ನಾಯಕ ಡಾ. ಅಜಿತ್ ನವಲೆ ಕೂಡ, “ಸಾಲಮನ್ನಾ ಯೋಜನೆಯ ಮಾನದಂಡಗಳು ಮತ್ತು ಷರತ್ತುಗಳನ್ನು ಸಾರ್ವಜನಿಕರ ಮುಂದೆ ಸ್ಪಷ್ಟಪಡಿಸಿ, ರೈತರ ಹಿತದೃಷ್ಟಿಯಿಂದ ಶೀಘ್ರ ಜಾರಿಗೆ ತರಬೇಕು” ಎಂದು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















