ದಾವಣಗೆರೆ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅಹಿಂದ ರಾಜಕೀಯದ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಹಿಂದ ನಾಯಕನೆಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಸಮುದಾಯದ ಅಭ್ಯರ್ಥಿ ಇದ್ದರೂ ಬೆಂಬಲ ನೀಡದಿರುವುದು ಏಕೆ ಎಂದು ಪ್ರಶ್ನಿಸಿದರು.
“ಮುಸ್ಲಿಂ ಅಭ್ಯರ್ಥಿಗಳಿಗೆ ಮತ ಹಾಕಬೇಡಿ ಎಂದು ಹೇಳುವ ನೀವು, ಅಹಿಂದ ವರ್ಗದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಯಾಕೆ ಪ್ರಯತ್ನಿಸುತ್ತೀರಿ?” ಎಂದು ಅವರು ಪ್ರಶ್ನಿಸಿದರು.ರಾಜ್ಯದಲ್ಲಿ ಹೊಸ ಬದಲಾವಣೆಗೆ ಅವಕಾಶ ನೀಡಬೇಕು ಎಂದು ಹೇಳಿದ ಕುಮಾರಸ್ವಾಮಿ, ಈ ಚುನಾವಣೆ ಸರ್ಕಾರಕ್ಕೆ ಯಾವುದೇ ಅಪಾಯ ಉಂಟುಮಾಡುವುದಿಲ್ಲ. ಆದರೆ ಸರ್ಕಾರದ ಕಾರ್ಯವೈಖರಿಯಲ್ಲಿ ಭಯ ಮತ್ತು ಜವಾಬ್ದಾರಿತನ ಬರಲು ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ಹಿಂದುಳಿದ ವರ್ಗಗಳನ್ನು ಉತ್ತೇಜಿಸುವ ಕೆಲಸ ಮಾಡಿದೆ ಎಂದು ಹೇಳಿದ ಅವರು, ಅಹಿಂದ ವರ್ಗದ ಅಭ್ಯರ್ಥಿಗೆ ಟಿಕೆಟ್ ನೀಡಿರುವುದನ್ನು ಉಲ್ಲೇಖಿಸಿದರು. “ನಿಮ್ಮ ಅಭ್ಯರ್ಥಿಗಳನ್ನು ಗ್ಯಾರಂಟಿ ಯೋಜನೆಗಳು ರಕ್ಷಿಸುತ್ತವೆ ಎಂದಾದರೆ, ಕ್ಷೇತ್ರದಲ್ಲಿ ದಿನಗಟ್ಟಲೆ ಕ್ಯಾಂಪ್ ಮಾಡುವ ಅಗತ್ಯವೇನು?” ಎಂದು ಸಿಎಂ ವಿರುದ್ಧ ಹರಿಹಾಯ್ದರು.ಇನ್ನೂ ಕೇಂದ್ರ-ರಾಜ್ಯ ಸಂಬಂಧಗಳ ವಿಚಾರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಂಘರ್ಷಪೂರ್ಣ ನಿಲುವು ತಾಳುತ್ತಿದೆ ಎಂದು ಆರೋಪಿಸಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರದ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲೇ ನಿರ್ಧಾರಗಳು ಸಾಧ್ಯವಾಗಿವೆ ಎಂದು ಹೇಳಿದರು.ರಾಜ್ಯದ ಅಭಿವೃದ್ಧಿಗೆ ಕೇಂದ್ರದ ಸಹಕಾರವನ್ನು ಸರಿಯಾಗಿ ಬಳಸಿಕೊಳ್ಳಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, ಕೈಗಾರಿಕೆ, ನೀರಾವರಿ ಸೇರಿದಂತೆ ಪ್ರಮುಖ ಯೋಜನೆಗಳಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ದೂರಿದರು.














