ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ : ಸಾರಾಯಿ ಮಾರಲು ಡಾಕ್ಟರ್ ಯಾಕೆ ಎಂದ ಬಿಜೆಪಿ..!

1 Min Read

ಬೆಂಗಳೂರು: ಮೊದಲೇ ಸರ್ಕಾರದ ಒಳಗೆ ವರ್ಗಾವಣೆ ದಂಧೆ ನಡೀತಾ ಇದೆ ಎಂಬ ಆರೋಪ ಕೇಳಿ ಬರ್ತಾ ಇದೆ. ಈ ಬೆನ್ನಲ್ಲೇ ಪತ್ರವೊಂದು ವೈರಲ್ ಆಗಿದ್ದು, ಇನ್ನಷ್ಟು ಚರ್ಚೆಗೆ ಕಾರಣವಾಗಿದೆ. ಅಂದ್ರೆ ಮಂಡ್ಯ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಬರೆದಿರುವ ಪತ್ರ ವೈರಲ್ ಆಗಿದೆ. ಇದು ವಿವಾದಕ್ಕೆ ಕಾರಣವಾಗಿದೆ.

ಸೋಷಿಯಲ್ ಮೀಡಿಯಾದಲ್ಲೆಲ್ಲಾ ವೈರಲ್ ಆಗಿರುವ ಶಿಫಾರಸು ಪತ್ರದಲ್ಲಿ ಪತ್ರದ ಸಂಖ್ಯೆಯಾಗಲಿ ಅಥವಾ ದಿನಾಂಕವಾಗಲಿ ನಮೂದು ಮಾಡಲಾಗಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ಸಹಿ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೀಗಾಗಿ ವರ್ಗಾವಣೆ ದಂಧೆಯ ಹಿಂದೆ ಕುಟುಂಬದವರ ಕೈವಾಡವಿದೆ ಎಂದು ಆರೋಪಿಸಲಾಗಿದೆ. ಶಿಫಾರಸು ಪತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಸುರೇಶ್ ಕುಮಾರ್ ಅವರು ವ್ಯಂಗ್ಯವಾಡಿದ್ದು, ವೈದ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ಹಾಕುವುದು ಅತ್ಯಂತ ಅನುಚಿತ ಎಂದಿದ್ದಾರೆ.

ಶಾಸಕ ಅಭಯ್ ಪಾಟೀಲ್, ಸಾರಾಯಿ ಮಾರೋಕೆ ಡಾಕ್ಟರ್ ಯಾಕೆ..? ಇಮಾಮ್ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ..? ಸಿಎಂಗೆ ಅರಳು ಮರಳಾಗಿದೆ. ಚಿಕಿತ್ಸೆಯ ಅಗತ್ಯವಿದೆ ಎಂದಿದ್ದಾರೆ. ಬಿಜೆಪಿ ನಾಯಕರ ಈ ಮಾತುಗಳಿಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವರ್ಗಾವಣೆ ಪತ್ರ ಅಧಿಕೃತವೋ..? ಅಲ್ಲವೋ..? ಎಂಬುದು ತಮಗೆ ತಿಳಿದಿಲ್ಲ. ಆದರೆ ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಹೋಗಲು ನಿಯಮಗಳಲ್ಲಿ ಅವಕಾಶವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಮಾಡಿರುವ ಅಭಿವೃದ್ದಿಯ ಕೆಲಸಗಳು ಚರ್ಚೆಯಾಗಬಾರದು ಅಂತ ಬಿಜೆಪಿಯವರು ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದಿದ್ದಾರೆ.

Share This Article
Enable Notifications OK No thanks