ಬೆಂಗಳೂರು.ಜುಲೈ.27: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ತನ್ನ ರೌದ್ರಾವತಾರ ತೋರಲು ಸಜ್ಜಾಗಿದೆ. ರಾಜ್ಯದಾದ್ಯಂತ ಮುಂದಿನ 48 ಗಂಟೆಗಳ ಕಾಲ ಮಳೆರಾಯನ ಆರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 27 ಮತ್ತು 28 ರಂದು ಪ್ರಚಂಡ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ. ಸಮುದ್ರ ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಕಡಲತೀರದ ನಿವಾಸಿಗಳು, ಪ್ರವಾಸಿಗರು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಭಾಗದಲ್ಲಿ ಮಳೆಗಿಂತ ಗಾಳಿಯ ವೇಗ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಚಂಡಮಾರುತದಂತಹ ಗಾಳಿ ಬೀಸುವ ಲಕ್ಷಣಗಳಿವೆ.

ಸಿಲಿಕಾನ್ ಸಿಟಿ ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ದಾವಣಗೆರೆ ಹಾಗೂ ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.










