ಬೆಂಗಳೂರು.ಜುಲೈ.20: ರಾಜ್ಯದಲ್ಲಿ ಸದ್ಯ ಬಿಡುವು ನೀಡಿದ್ದ ವರುಣದೇವ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮುಂಗಾರು ಮಳೆ ಚುರುಕಾಗಲಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 20 ಮತ್ತು 21 ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜುಲೈ 20 ರಂದು ಕರಾವಳಿ ತೀರದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ತಂಗಾಳಿ ಬೀಸಲಿದ್ದು, ಜುಲೈ 21 ರಂದೂ ಸಹ ಇದೇ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಧ್ಯಮ ಪ್ರಮಾಣದ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಜುಲೈ 20 ರಂದು ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಲವಾದ ಬಿರುಗಾಳಿ ಬೀಸಲಿದ್ದು, ಇದರೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲೂ ವರುಣನ ಕೃಪೆ ಮುಂದುವರಿಯಲಿದೆ. ಜುಲೈ 20 ಮತ್ತು 21 ರಂದು ಈ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.









