ಬೆಂಗಳೂರು: ರಾಜ್ಯಾದ್ಯಂತ ನೈಋತ್ಯ ಮುಂಗಾರು ತನ್ನ ಆರ್ಭಟವನ್ನು ಮತ್ತಷ್ಟು ಹೆಚ್ಚಿಸಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ (IMD) ಜೂನ್ 13ರವರೆಗೆ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಮುಂಗಾರು ಮಾರುತಗಳ ಉತ್ತರ ಗಡಿ ಈಗಾಗಲೇ ಕರ್ನಾಟಕದ ಬಹುತೇಕ ಪ್ರದೇಶಗಳನ್ನು ಆವರಿಸಿದ್ದು, ಕೊಡಗು ಜಿಲ್ಲೆಯ ಕೆಲವು ಭಾಗಗಳಿಗೂ ಮುಂಗಾರು ಕಾಲಿಟ್ಟಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಮೊದಲ ಹಂತದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಆದರೆ ಮಳೆಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬುಧವಾರ ಹವಾಮಾನ ಇಲಾಖೆ ಎಚ್ಚರಿಕೆಯನ್ನು ವಿಸ್ತರಿಸಿದೆ. ಇದೀಗ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಸೇರಿದಂತೆ ಒಟ್ಟು ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಜಾರಿಯಲ್ಲಿದೆ.

ಈ ಬಾರಿಯ ಮುಂಗಾರು ರಾಜ್ಯಕ್ಕೆ ಉತ್ತಮ ಮಳೆಯನ್ನೇ ನೀಡಿದೆ. ರಾಜ್ಯದ ದೀರ್ಘಕಾಲದ ಸರಾಸರಿ ಮಳೆ ಪ್ರಮಾಣ 115 ಮಿ.ಮೀ. ಆಗಿದ್ದರೆ, ಈ ಬಾರಿ ಇದುವರೆಗೆ 125 ಮಿ.ಮೀ. ಮಳೆ ದಾಖಲಾಗಿದೆ. ಅಂದರೆ, ಸಾಮಾನ್ಯಕ್ಕಿಂತ ಸುಮಾರು ಶೇ.8 ರಷ್ಟು ಅಧಿಕ ಮಳೆಯಾಗಿದೆ.








