ಬೆಂಗಳೂರು.ಜೂನ್.23: ರಾಜ್ಯಾದ್ಯಂತ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಪ್ರಕ್ರಿಯೆಯಿಂದ ವಂಚಿತರಾಗಬಾರದು ಎಂಬ ಮಹತ್ತರ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗಾಗಿ ಸಹಾಯ ಕೇಂದ್ರಗಳನ್ನು ಪ್ರಾರಂಭಿಸಲು ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.
ದಿನಾಂಕ 04-06-2026 ರಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಚುನಾವಣೆ ಪ್ರಕ್ರಿಯೆ ನಡೆಯುವಾಗ ಸಾರ್ವಜನಿಕರಿಗೆ ಗ್ರಾಮ ಪಂಚಾಯಿತಿಯಿಂದ ನಿಯಮಾನುಸಾರ ಸಿಗಬೇಕಾದ ಅಗತ್ಯ ದಾಖಲೆಗಳು ಯಾವುದೇ ವಿಳಂಬವಿಲ್ಲದೆ, ಸಕಾಲದಲ್ಲಿ ಜನಸಾಮಾನ್ಯರಿಗೆ ತಲುಪುವುದನ್ನು ಖಾತ್ರಿಪಡಿಸಿಕೊಳ್ಳಲು ಈ ಸಹಾಯ ಕೇಂದ್ರಗಳು ನೆರವಾಗಲಿವೆ.
ಪ್ರತಿ ಗ್ರಾಮ ಪಂಚಾಯಿತಿಯ ‘ಬಾಪೂಜಿ ಸೇವಾ ಕೇಂದ್ರ’ದಲ್ಲಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ಗಳು ಈ ಹೊಸ ಸಹಾಯ ಕೇಂದ್ರದ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿರುತ್ತದೆ.ಈ ಸಹಾಯ ಕೇಂದ್ರಗಳ ಒಟ್ಟಾರೆ ಕಾರ್ಯವೈಖರಿ ಮತ್ತು ಮೇಲ್ವಿಚಾರಣೆಯನ್ನು ಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ವಹಿಸಿಕೊಳ್ಳುವಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ನೀಡಿದೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪೀಠಾಧಿಕಾರಿಗಳು ರಾಜ್ಯಪಾಲರ ಆದೇಶದ ಮೇರೆಗೆ ಈ ಆದೇಶ ಪತ್ರವನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ದೂರು ಅಥವಾ ವಿಳಂಬಕ್ಕೆ ಆಸ್ಪದ ನೀಡದಂತೆ ಸಾರ್ವಜನಿಕರಿಗೆ ಈ ಕೇಂದ್ರಗಳ ಮೂಲಕ ಸೇವೆ ಒದಗಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








