Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಕೆ.ಆರ್. ಸರ್ಕಲ್‌ನಲ್ಲಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಡಿಕ್ಕಿ

---Advertisement---

 

ರಾಜಧಾನಿ ಬೆಂಗಳೂರಿನ ಹೃದಯಭಾಗವಾದ ಕೆ.ಆರ್. ಸರ್ಕಲ್ (ಕೃಷ್ಣರಾಜೇಂದ್ರ ವೃತ್ತ) ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬಿಎಂಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಬಸ್ ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಹಿಳೆಯೊಬ್ಬರು ಬಸ್‌ನೊಳಗೆ ಸಿಲುಕಿಕೊಂಡ ಕಾರಣ ರಕ್ಷಣಾ ಕಾರ್ಯಾಚರಣೆ ನಡೆಸಬೇಕಾಯಿತು.

ಮಾಹಿತಿಯ ಪ್ರಕಾರ, ಬೆಳಗಿನ ಸಂಚಾರ ಆರಂಭವಾಗುತ್ತಿದ್ದ ವೇಳೆ ಕೆ.ಆರ್. ಸರ್ಕಲ್‌ನ ಸಿಗ್ನಲ್ ಬಳಿ ಬಿಎಂಟಿಸಿಯ ‘ವಾಯು ವಜ್ರ’ (ವೋಲ್ವೋ) ಬಸ್ ನಿಂತಿತ್ತು. ಇದೇ ಸಂದರ್ಭದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಸಾಮಾನ್ಯ ಬಿಎಂಟಿಸಿ ಬಸ್ ನಿಯಂತ್ರಣ ತಪ್ಪಿ ವೋಲ್ವೋ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸಾಮಾನ್ಯ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರ ಕಾಲು ಕಬ್ಬಿಣದ ಅವಶೇಷಗಳ ನಡುವೆ ಸಿಲುಕಿಕೊಂಡಿದ್ದರಿಂದ ಅವರನ್ನು ಹೊರತೆಗೆಯಲು ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಸಾಕಷ್ಟು ಹರಸಾಹಸಪಟ್ಟರು. ಕಬ್ಬಿಣದ ಭಾಗಗಳನ್ನು ಕತ್ತರಿಸಿ ಮಹಿಳೆಯನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಯಿತು.

ಅಪಘಾತ ಸಂಭವಿಸಿದ ವೇಳೆ ಬಸ್‌ಗಳಲ್ಲಿ ಕಚೇರಿ ಹಾಗೂ ಇತರ ಕೆಲಸಗಳಿಗೆ ತೆರಳುತ್ತಿದ್ದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಹಠಾತ್ ಡಿಕ್ಕಿಯಿಂದ ಹಲವು ಪ್ರಯಾಣಿಕರಿಗೆ ತಲೆ, ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು, ಕೆಲವರಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಬಳಿಕ ಸ್ಥಳೀಯರು ಹಾಗೂ ವಾಹನ ಸವಾರರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿ, ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲು ನೆರವಾದರು.ಅಪಘಾತದ ಪರಿಣಾಮ ನಗರದ ಅತ್ಯಂತ ಬ್ಯುಸಿ ವೃತ್ತಗಳಲ್ಲಿ ಒಂದಾದ ಕೆ.ಆರ್. ಸರ್ಕಲ್ನಲ್ಲಿ ಕೆಲಕಾಲ ಭಾರೀ ಸಂಚಾರ ದಟ್ಟಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಅಪಘಾತಕ್ಕೀಡಾದ ಬಸ್‌ಗಳನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಪುನಃ ಸುಗಮಗೊಳಿಸಿದರು.ಪ್ರಾಥಮಿಕ ಮಾಹಿತಿಯ ಪ್ರಕಾರ, ಬ್ರೇಕ್ ವೈಫಲ್ಯ ಅಥವಾ ಚಾಲಕನ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣವನ್ನು ಪೊಲೀಸರು ತನಿಖೆಯ ಬಳಿಕವೇ ಸ್ಪಷ್ಟಪಡಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now