ಸುದ್ದಿಒನ್,ಹೊಸಪೇಟೆ,ಮೇ.24: ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಹೆಜ್ಜೇನು ಹುಳುಗಳು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಸಂಭವಿಸಿದೆ.
ತಂಬ್ರಹಳ್ಳಿ ಹೊರವಲಯದ ನಿವಾಸಿ ತಳವಾರ ಹನುಮಂತಪ್ಪ (70) ಮೃತಪಟ್ಟ ದುರ್ದೈವಿ ರೈತರಾಗಿದ್ದಾರೆ. ಮೇ 19 ರಂದು ಹನುಮಂತಪ್ಪ ಅವರು ತಮ್ಮ ಜಮೀನಿನಲ್ಲಿ ಎಂದಿನಂತೆ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದರು. ಈ ಸಂದರ್ಭದಲ್ಲಿ ಹಠಾತ್ತಾಗಿ ಮುಗಿಬಿದ್ದ ಹೆಜ್ಜೇನುಗಳ ಹಿಂಡು ಅವರ ಮೇಲೆ ತೀವ್ರವಾಗಿ ದಾಳಿ ನಡೆಸಿವೆ. ಜೇನುನೊಣಗಳ ಕಡಿತದಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಕೊಪ್ಪಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೊಪ್ಪಳದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ಅವರ ಆರೋಗ್ಯ ಪರಿಸ್ಥಿತಿ ಕ್ಷೀಣಿಸಿದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ದುರದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದ ಹನುಮಂತಪ್ಪ ಅವರು ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.










