Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ಬೆಂಗಳೂರು, ಏಪ್ರಿಲ್ 14: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾಸಾಹೇಬ್ ಡಾII ಬಿ ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಹಾಗೂ ಡಾII ಬಿ ಆರ್ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು, “ಜಾತಿ ವ್ಯವಸ್ಥೆ ಇರುವವರೆಗೂ ಅಸ್ಪೃಶ್ಯತೆ ಇರುತ್ತದೆ , ಸಮಾಜಿಕ , ಆರ್ಥಿಕ ಅಸಮಾನತೆ ಇರುವವರೆಗೆ ಜಾತೀಯತೆ ಇರಲಿದೆ” ಎಂದು ಸ್ಪಷ್ಟವಾಗಿ ಹೇಳಿದ್ದರು ಎಂದರು.

ದೌರ್ಜನ್ಯಕ್ಕೆ ಒಳಗಾದ ಎಲ್ಲರ ಪರವಾಗಿ ಹೋರಾಟ :

ಅಂಬೃಡ್ಕರ್ ಅವರು, ಎಲ್ಲಾ ದಮನಿತರ, ಪರಿಶಿಷ್ಟ ವರ್ಗಗಳ, ಶೋಷಿತರ, ಅವಕಾಶ ವಂಚಿತ ಜನರ ಪರವಾಗಿ ಹೋರಾಟವನ್ನು ತಮ್ಮ ಜೀವನದುದ್ದಕ್ಕೂ ಮಾಡಿದ್ದರು. ಕೇವಲ ದಲಿತರ ನಾಯಕರಾಗಿರದೆ ಅವಕಾಶ ವಂಚಿತರ, ದೌರ್ಜನ್ಯಕ್ಕೆ ಒಳಗಾದ ಎಲ್ಲರ ಪರವಾಗಿ ಹೋರಾಟ ಮಾಡಿದ್ದರು ಎಂದರು.

ಜಗತ್ತಿನ ಶ್ರೇಷ್ಠ ಸಂವಿಧಾನ :

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನದ ಮೂಲಕ ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಆದ್ದರಿಂದಲೇ ದೇಶದ ಸಂವಿಧಾನವನ್ನು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಎಂದು ಪರಿಗಣಿಸಲಾಗುತ್ತದೆ ಎಂದರು.

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನೋವಿನ ಸಂಗತಿ :

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿದೆ ಇರುವುದು ನೋವಿನ ಸಂಗತಿ ಎಂದ ಮುಖ್ಯಮಂತ್ರಿಗಳು, ಸಮಾಜಿಕ ,ಆರ್ಥಿಕ ಅಸಮಾನತೆಯಿರುವ ಈ ಸಮಾಜದಲ್ಲಿ ಇವುಗಳನ್ನು ಹೋಗಲಾಡಿಸದಿದ್ದರೆ ದೇಶಕ್ಕೆ ಸ್ವಾತಂತ್ರ ಬಂದಿರುವುದು ಯಶಸ್ವಿಯಾಗಲಾರದು ಎಂದು ಅಂಬೇಡ್ಕರ್ ಸ್ಪಷ್ಟವಾಗಿ ನಡೆದಿದ್ದರು ಎಂದರು.

ಹಿಂದೂ ಧರ್ಮದ ಸುಧಾರಣೆಗಾಗಿ ಪ್ರಯತ್ನ :

ಅಂಬೇಡ್ಕರ್ ವಿದ್ವಾಂಸರಾಗಿದ್ದರೂ ದಮನಿತರ ಪರವಾಗಿ ಹೋರಾಡಿದರಲ್ಲದೆ, ಹಿಂದೂ ಧರ್ಮದ ಸುಧಾರಣೆಗಾಗಿ ಬಹಳ ಪ್ರಯತ್ನ ಮಾಡಿದರು. ಆದರೆ ಕಡೆಗೆ ಅದು ಕೈಗೂಡದೆ ಹಿಂದೂ ಧರ್ಮವನ್ನು ತ್ಯಜಿಸಿದರು. ಅಸಮಾನತೆಗೆ ಕಾರಣವಾದ ಮನುವಾದವನ್ನು ತಿರಸ್ಕರಿಸಿದ್ದರು ಎಂದರು.

ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣ ಒಂದೇ ಪ್ರಬಲ ಅಸ್ತ್ರ :

ಸಮಾಜಿಕ, ಆರ್ಥಿಕ ಶಕ್ತಿ ಎಲ್ಲರಿಗೂ ದೊರಕಿದಾಗ ಮಾತ್ರ ಸ್ವಾವಲಂಬನೆ ಸಾಧ್ಯ. ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣ ಒಂದೇ ಪ್ರಬಲ ಅಸ್ತ್ರ ಎಂದು ಅಂಬೇಡ್ಕರ್ ಸಾರಿದ್ದರು ಎಂದರು.

ಅಂಬೇಡ್ಕರ್ ಅವರು ವಿದ್ಯಾವಂತರಾಗದೆ ಹೋಗಿದ್ದರೆ, ಅವರಲ್ಲಿ ಹೋರಾಟದ ಮನೋಭಾವ ಇರದೇ ಹೋಗಿದ್ದರೆ ಇಂಥ ಸಂವಿಧಾನ ಸಿಗಲು ನಮಗೆ ಸಾಧ್ಯವಿರಲಿಲ್ಲ. ಅದಕ್ಕಾಗಿಯೇ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅಂಬೇಡ್ಕರ್, ರಾಮ್ ಮನೋಹರ್ ಲೋಹಿಯಾ, ಜವಾಹರ್ ಲಾಲ್ ನೆಹರೂ ಅವರು ಪಡೆದಂತಹ ಶಿಕ್ಷಣ ಪಡೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ, ಮಾನವೀಯತೆಯಿಂದ ಕೂಡಿರುವ ಶಿಕ್ಷಣ ನಮಗೆ ಸಿಗಬೇಕು ಎಂದರು.

ಸಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದರಿಂದಲೇ ಇಂಥ ಸಂವಿಧಾನ ನೀಡಲು ಅಂಬೇಡ್ಕರ್ ಅವರಿಗೆ ಸಾಧ್ಯವಾಯಿತು ಎಂದು ಮುಖ್ಯಮಂತ್ರಿಗಳು ಹೇಳಿದರು.

ವೈಜ್ಞಾನಿಕ ಶಿಕ್ಷಣ ದೊರೆಯದಿದ್ದರೆ ಸಮ ಸಮಾಜದ ನಿರ್ಮಾಣ ಅಸಾಧ್ಯ :

ವೈಜ್ಞಾನಿಕ ಶಿಕ್ಷಣ ದೊರೆಯದಿದ್ದರೆ ಸಮ ಸಮಾಜದ ನಿರ್ಮಾಣ ಅಸಾಧ್ಯ. ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾಜಿಕ , ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಸಮ ಸಮಾಜ ನಿರ್ಮಾಣಕ್ಕೆ ಸರ್ಕಾರ ಮಾಡುತ್ತಿರುವ ಪ್ರಾಮಾಣಿಕ ಪ್ರಯತ್ನವಾಗಿದೆ ಎಂದರು.

ಮನುವಾದಿಗಳ ಸುಳ್ಳುಗಳನ್ನು ನಂಬಬೇಡಿ :

ಮನುವಾದಿಗಳು ಸಂವಿಧಾನ ವಿರೋಧಿಗಳಾಗಿದ್ದು, ಸುಳ್ಳು ಹೇಳಿ ಸಮಾಜದ ದಾರಿ ತಪ್ಪಿಸುತ್ತಾರೆ. ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿದರು, ದೆಹಲಿಯಲ್ಲಿ ಅಂಬೇಡ್ಕರ್ ಅವರ ಶವ ಸಂಸ್ಕಾರ ಮಾಡಲು ಅವಕಾಶ ನೀಡಲಿಲ್ಲ ಎಂದೂ ಅಪಪ್ರಚಾರ ಮಾಡುತ್ತಾರೆ ಜನ ಇಂಥ ಸುಳ್ಳುಗಳನ್ನು ನಂಬಬಾರದು ಎಂದರು.

ಅಂಬೇಡ್ಕರ್ ಅವರು ಎಲ್ಲಾ ಕಾಲಕ್ಕೂ ಸಲ್ಲುತ್ತಾರೆ :

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಲ್ಲದೇ ಹೋಗಿದ್ದರೆ ದೇಶದಲ್ಲಿ ಏನು ಆಗುತ್ತಿತ್ತು ಎಂದು ಊಹಿಸುವುದೇ ಅಸಾಧ್ಯ ಎಂದ ಮುಖ್ಯಮಂತ್ರಿಗಳು ಅಂಬೇಡ್ಕರ್ ಅವರ ಬದುಕನ್ನು, ಉದ್ದೇಶವನ್ನು ಮನನ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರು ಎಲ್ಲಾ ಕಾಲಕ್ಕೂ ಸಲ್ಲುತಾರೆ ಎಂದರು.

ವಸತಿಶಾಲೆಗಳ ಶೇ. 97.22% ವಿದ್ಯಾರ್ಥಿಗಳು ಉತ್ತೀರ್ಣ :

ಸರ್ಕಾರ ನಡೆಸುವ ವಸತಿಶಾಲೆಗಳಲ್ಲಿ ಶೇ. 97.22% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪಿಯುಸಿ ಪರೀಕ್ಷೆಯಲ್ಲಿಯೂ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರುವುದು ಇದು ಸರ್ಕಾರದ ಹೆಗ್ಗಳಿಕೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಭಿನಂದಿಸಿದರು.

ಸಚಿವರಾದ ಡಾ: ಹೆಚ್. ಸಿ ಮಹದೇವಪ್ಪ, ಕೆ. ಹೆಚ್.ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಮೇಲ್ಮನೆ ಸದಸ್ಯರಾದ ಭೋಜೇಗೌಡ, ಗೋವಿಂದರಾಜು, ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...