ಬೆಂಗಳೂರು.ಜುಲೈ.05: ಅಪರಾಧ ಪ್ರಕರಣವೊಂದರಲ್ಲಿ ವಿಚಾರಣಾಧೀನ ಕೈದಿಯಾಗಿ ಕಾರಾಗೃಹ ಸೇರಿದ ತಕ್ಷಣವೇ ವ್ಯಕ್ತಿಯೊಬ್ಬನ ಆಸ್ತಿ ಹಕ್ಕುಗಳು ಮೊಟಕುಗೊಳ್ಳುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಜೈಲಿನಲ್ಲಿದ್ದ ಅವಧಿಯಲ್ಲೂ ತನ್ನ ಸ್ವಂತ ಆಸ್ತಿಯನ್ನು ಮಾರಾಟ ಮಾಡಲು ಮತ್ತು ಅದನ್ನು ಕಾನೂನುಬದ್ಧವಾಗಿ ನೋಂದಣಿ ಮಾಡಿಸಲು ಕೈದಿಗೆ ಸಂಪೂರ್ಣ ಹಕ್ಕಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಧಾರವಾಡ ಜೈಲಿನಲ್ಲಿರುವ ಕಮಲಾಪುರ ಗ್ರಾಮದ ಬಸವರಾಜು ಎಂಬುವವರು ತಮ್ಮ 22 ಗುಂಟೆ ಜಮೀನನ್ನು ಮಾರಾಟ ಮಾಡಲು ನಿರ್ಧರಿಸಿದ್ದರು. ಆದರೆ ಉಪ ನೋಂದಣಾಧಿಕಾರಿ ಕಚೇರಿಗೆ ಖುದ್ದಾಗಿ ಹಾಜರಾಗಲು ಸಾಧ್ಯವಾಗದ ಕಾರಣ, ಸಬ್ ರಿಜಿಸ್ಟ್ರಾರ್ ಅವರನ್ನೇ ಜೈಲಿಗೆ ಕರೆಸಿಕೊಳ್ಳಲು ಮುಂದಾಗಿದ್ದರು. ಇದಕ್ಕೆ ಉಪ ನೋಂದಣಾಧಿಕಾರಿಗಳು ಸಮ್ಮತಿಸಿದ್ದರೂ, ಜೈಲಿನ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಸವರಾಜು ಅವರು ತಮಗೆ ನ್ಯಾಯ ದೊರಕಿಸಿಕೊಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠವು, ಸಾಮಾನ್ಯ ನಾಗರಿಕರಂತೆ ವಿಚಾರಣಾಧೀನ ಕೈದಿಗೂ ತನ್ನ ಆಸ್ತಿಯನ್ನು ಪರಭಾರೆ ಮಾಡುವ ಎಲ್ಲಾ ಹಕ್ಕುಗಳೂ ಇರುತ್ತವೆ ಎಂದು ಅಭಿಪ್ರಾಯಪಟ್ಟಿದೆ. ಜೈಲುವಾಸವು ಯಾವುದೇ ವ್ಯಕ್ತಿಯ ಆಸ್ತಿ ಮಾಲೀಕತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಅಲ್ಲದೆ, ನೋಂದಣಿ ಪ್ರಕ್ರಿಯೆಗಾಗಿ ಜೈಲಿನಲ್ಲಿರುವ ವ್ಯಕ್ತಿಯು ಉಪ ನೋಂದಣಾಧಿಕಾರಿಗಳ ಕಚೇರಿಗೆ ಕಡ್ಡಾಯವಾಗಿ ಬರಬೇಕು ಎಂದು ಒತ್ತಾಯಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ.
ಬದಲಾಗಿ, ಉಪ ನೋಂದಣಾಧಿಕಾರಿಗಳೇ ಖುದ್ದಾಗಿ ಜೈಲಿಗೆ ಭೇಟಿ ನೀಡಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಮತ್ತು ಅದಕ್ಕೆ ಬೇಕಾದ ಎಲ್ಲಾ ಅಗತ್ಯ ಸೌಲಭ್ಯ ಹಾಗೂ ಸಹಕಾರವನ್ನು ಒದಗಿಸುವುದು ಜೈಲು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








