ಏನನ್ನಾದರೂ ಸಾಧಿಸಬೇಕೆಂಬ ಛಲದೊಂದಿಗೆ ಬದುಕಿದರೆ ಬದುಕು ಸಾರ್ಥಕ : ಡಾ.ಬಸವ ಪ್ರಭು ಸ್ವಾಮೀಜಿ

2 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ. ನ. 23 :
ಪ್ರತಿಯೊಬ್ಬ ಮನುಷ್ಯನಲ್ಲಿ ಅಸಾಧಾರಣ ಶಕ್ತಿ ಇದೆ ಅದನ್ನು ಅರಿತು ಈ ಜಗತ್ತಿಗೆ ಸಾಧಿಸಿ ತೋರಿದವರು ಮಹಾನ್ ಸಾಧಕರಾಗುತ್ತಾರೆ ಎಂದು ಮುರುಘಾ ಮಠದ ಡಾ.ಬಸವ ಪ್ರಭು ಮಹಾಸ್ವಾಮಿಗಳು ಹೇಳಿದರು.

 

ನಗರದ ಶ್ರೀ ಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 2024- 25 ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಮನುಷ್ಯ ಬದುಕುವುದು ಬರೀ ಆಹಾರಕ್ಕಾಗಿ, ಅಧಿಕಾರಕ್ಕಾಗಿ, ಅಂತಸ್ತಿಗಾಗಿ ಅಲ್ಲ ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಬೇಕು ಎಂಬ ಛಲದೊಂದಿಗೆ ಬದುಕಿದಾಗ ಬದುಕು ಸಾರ್ಥಕವಾಗುತ್ತದೆ ಎಂದರು.

 

ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್.  ಪುಟ್ಟಸ್ವಾಮಿ ಮಾತಾನಾಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ಸೂಸಲು ಇಂತಹ ವೇದಿಕೆಗಳು ಹೆಚ್ಚು ಸಹಕಾರಿಯಾಗುತ್ತವೆ.  ನಿರ್ಣಾಯಕರು ಪೂರ್ವಗ್ರಹ ಪೀಡಿತರಾಗದೆ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕಾಗಿದೆ ಎಂದರು.

 

ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ. ಆರ್.  ಮಲ್ಲೇಶ್ ಮಾತನಾಡಿ ಹಲವು ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಂದ ದೂರ ಉಳಿದಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಬುದ್ಧಿವಂತರನ್ನಾಗಿಸುವ ಭರದಲ್ಲಿ ಕೇವಲ ಅಂಕಗಳ ಸ್ಪರ್ಧೆಗೆ ನಿಲ್ಲಿಸಿ ಮಕ್ಕಳನ್ನು ಪುಸ್ತಕದ ಹುಳುಗಳನ್ನಾಗಿಸಿದ್ದಾರೆ. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳು ಉತ್ತಮ ಹವ್ಯಾಸಗಳನ್ನು ರೂಡಿಸಿಕೊಂಡು ಕಲಿಕೆಯಲ್ಲಿ ಏಕಾಗ್ರತೆ ಸಾಧಿಸಿ ಹೆಚ್ಚು ಅಂಕಗಳನ್ನು ಗಳಿಸಲು ಸಫಲರಾಗುತ್ತಾರೆ ಎಂಬ ಸತ್ಯವನ್ನು  ಪೋಷಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

 

ಬೃಹನ್ಮಠ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಂ.ಜಿ ರಾಜೇಶ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ಎಲೆಮರೆ ಕಾಯಿಯಂತಿರುವ ಪ್ರತಿಭಾವಂತರನ್ನು ಗುರುತಿಸಲು ಇಂತಹ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಅಂದಾಗ ಮಾತ್ರ ಕಲೆ ಮತ್ತು ಸಂಸ್ಕೃತಿ ಬೆಳೆಯಲು ಸಾಧ್ಯವಾಗುತ್ತದೆ ಎಂದರು.

 

ಹಿರಿಯ ಪ್ರಾಂಶುಪಾಲರಾದ ಕೆ.ತಿಮ್ಮಯ್ಯ,ಲೋಕೇಶ್, ಇ.ಗುರುಮೂರ್ತಿ,ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್.ದೇವೇಂದ್ರಪ್ಪ, ಕಾರ್ಯದರ್ಶಿ ಆರ್.ಮುಸ್ತಫ,ಅನುದಾನಿತ ನೌಕರರ ಸಂಘದ ಅಧ್ಯಕ್ಷ ಜಿ.ಎಸ್.ತಿಪ್ಪೇಸ್ವಾಮಿ, ಸಹ ಕಾರ್ಯದರ್ಶಿ ನಾಗರಾಜ್ ಬೆಳಗಟ್ಟ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪಿ.ಯು.ವರ್ಷ ಪ್ರಾರ್ಥಿಸಿದರು,ಸಾಂಸ್ಕೃತಿಕ ವೇದಿಕೆ ಅಧ್ಯಕ್ಷರಾದ ಬಿ.ಗೋವಿಂದಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಉಪನ್ಯಾಸಕ ಪಿ.ಉಮಾಶಂಕರ್ ಸ್ವಾಗತಿಸಿದರು, ಉಪನ್ಯಾಸಕ ಶಿವಕುಮಾರ್ ವಂದಿಸಿದರು.ಉಪನ್ಯಾಸಕಿ ಶ್ರೀಮತಿ ಮೀರಾ ನಾಡಿಗ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *