ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12ರಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ. ಮುಖ್ಯಮಂತ್ರಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದೆ.ಸಿಎಂ ವಿಜಯ್ ಅವರು ದೇವಿಯ ದರ್ಶನ ಮತ್ತು ವಿಶೇಷ ಪೂಜೆಗಾಗಿ ಮಾತ್ರ ಕೊಲ್ಲೂರಿಗೆ ಆಗಮಿಸುತ್ತಿದ್ದು, ಪೂಜೆ ಮುಗಿದ ಬಳಿಕ ಅದೇ ದಿನ ತಮಿಳುನಾಡಿಗೆ ವಾಪಸ್ಸಾಗಲಿದ್ದಾರೆ.
ಅವರ ಪ್ರವಾಸದ ವೇಳೆ ಯಾವುದೇ ಸಾರ್ವಜನಿಕ ಕಾರ್ಯಕ್ರಮ ಅಥವಾ ರಾಜಕೀಯ ಸಭೆ-ಸಮಾರಂಭಗಳು ನಿಗದಿಯಾಗಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.ವಿವಿಐಪಿ ಭದ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಜೂನ್ 12ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ದರ್ಶನದ ಸಮಯವನ್ನು ಮರುಪರಿಶೀಲಿಸುವುದು ಒಳಿತು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಈ ಅವಧಿಯಲ್ಲಿ ಭದ್ರತಾ ತಪಾಸಣೆಗಳು ಹೆಚ್ಚಾಗಿರುವುದರಿಂದ ಸಾಮಾನ್ಯ ದರ್ಶನಕ್ಕೆ ವಿಳಂಬ ಹಾಗೂ ಅನಾನುಕೂಲ ಉಂಟಾಗುವ ಸಾಧ್ಯತೆ ಇದೆ.
ದೇವಸ್ಥಾನದ ಮುಖ್ಯ ಪ್ರವೇಶ ದ್ವಾರ, ಒಳಾಂಗಣ ಹಾಗೂ ಮುಖ್ಯಮಂತ್ರಿ ಸಂಚರಿಸುವ ಮಾರ್ಗಗಳಲ್ಲಿ ಸಾರ್ವಜನಿಕರು ಅನಗತ್ಯವಾಗಿ ಗುಂಪುಗೂಡುವುದು ಮತ್ತು ಜನಸಂದಣಿ ಉಂಟುಮಾಡುವುದನ್ನು ನಿರ್ಬಂಧಿಸಲಾಗಿದೆ.ಕೊಲ್ಲೂರಿಗೆ ಆಗಮಿಸುವ ಭಕ್ತರು ಹಾಗೂ ಸಾರ್ವಜನಿಕರು ಪೊಲೀಸ್ ಸಿಬ್ಬಂದಿಯೊಂದಿಗೆ ಸಹಕರಿಸಿ, ತಮ್ಮ ದರ್ಶನದ ಸಮಯವನ್ನು ಮುಂಚಿತವಾಗಿ ಯೋಜಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.









