Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡಿಗರಿಗೆ ರೈಲ್ವೆ ಇಲಾಖೆಯಿಂದ ಮತ್ತೆ ಅನ್ಯಾಯ : ಕನ್ನಡದಲ್ಲಿ ಪದೋನ್ನತಿ ಪರೀಕ್ಷೆ ಬರೆಯಲು ನಿರಾಕರಣೆ!

---Advertisement---

ಬೆಂಗಳೂರು.ಜೂನ್.19: ಕನ್ನಡಿಗರಿಗೆ ನೈರುತ್ಯ ರೈಲ್ವೆ ಇಲಾಖೆ ಮತ್ತೊಮ್ಮೆ ಘೋರ ಅನ್ಯಾಯ ಎಸಗಿದೆ. ರೈಲ್ವೆ ಇಲಾಖೆಯ ಪದೋನ್ನತಿ (ಪ್ರಮೋಷನ್) ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿ ಬರೆಯಲು ಇಲಾಖೆಯು ಮತ್ತೆ ನಿರಾಕರಿಸಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಕರ್ನಾಟಕದಲ್ಲೇ ನಡೆಯುವ ಪರೀಕ್ಷೆಯಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಿ, ಕೇವಲ ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನೈರುತ್ಯ ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯು ಜೂನ್ 25ರಂದು ನಡೆಯಲು ನಿಗದಿಯಾಗಿದೆ. ಆದರೆ ಈ ಪರೀಕ್ಷೆಯಲ್ಲಿ ಪ್ರಾದೇಶಿಕ ಭಾಷೆಯಾದ ಕನ್ನಡಕ್ಕೆ ಅವಕಾಶ ನೀಡದಿರುವುದು ಕನ್ನಡಪರ ಸಂಘಟನೆಗಳನ್ನು ರೊಚ್ಚಿಗೆಬ್ಬಿಸಿದೆ. ಈ ಹಿಂದೆ ಮಾರ್ಚ್ 17ರಂದು ನಡೆಯಬೇಕಿದ್ದ ಇದೇ ಪರೀಕ್ಷೆಯಲ್ಲೂ ಕನ್ನಡಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಆ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳು ಪರೀಕ್ಷಾ ಕೇಂದ್ರಕ್ಕೆ ಮುತ್ತಿಗೆ ಹಾಕಿ ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ ಈಗ ಮತ್ತದೇ ಚಾಳಿಯನ್ನು ಮುಂದುವರಿಸಿರುವ ರೈಲ್ವೆ ಇಲಾಖೆ, ಕನ್ನಡಿಗರ ಆಕ್ರೋಶವನ್ನು ಲೆಕ್ಕಿಸದೆ ಮತ್ತೆ ಹಿಂದಿ ಮತ್ತು ಇಂಗ್ಲಿಷ್ನಲ್ಲೇ ಪರೀಕ್ಷೆ ನಡೆಸಲು ಹಠ ಹಿಡಿದಿದೆ.

ಕೇಂದ್ರ ಸರ್ಕಾರ ಮತ್ತು ರೈಲ್ವೆ ಇಲಾಖೆ ಕನ್ನಡಿಗರ ಮೇಲೆ ಸತತವಾಗಿ ದಬ್ಬಾಳಿಕೆ ಹಾಗೂ ಉದ್ದಟತನ ಪ್ರದರ್ಶಿಸುತ್ತಿದೆ ಎಂದು ಕನ್ನಡ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.ಕರ್ನಾಟಕದ ನೆಲದಲ್ಲಿ ನಡೆಯುವ ಯಾವುದೇ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡವೇ ಮುಖ್ಯವಾಗಿರಬೇಕು. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ, ಜೂನ್ 25 ರಂದು ನಡೆಯಲಿರುವ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ನಡೆಸಲು ಬಿಡುವುದಿಲ್ಲ. ಈ ಹೋರಾಟಕ್ಕಾಗಿ ನಮ್ಮನ್ನು ಬಂಧಿಸಿದರೂ ನಾವು ಹೆದರುವುದಿಲ್ಲ, ನಮ್ಮ ಹಕ್ಕಿಗಾಗಿ ಉಗ್ರ ಹೋರಾಟಕ್ಕೆ ಸಿದ್ಧರಿದ್ದೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ನಾಯಕರು ಎಚ್ಚರಿಕೆ ನೀಡಿದ್ದಾರೆ.

Join WhatsApp

Join Now

Join Telegram

Join Now