ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸುವ ಬೆಳವಣಿಗೆಯೊಂದು ಚರ್ಚೆಗೆ ಗ್ರಾಸವಾಗಿದೆ. ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೊಸ ರಾಜಕೀಯ ಸಂಘಟನೆ ಅಥವಾ ಜನಾಂದೋಲನ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.ಮೂಲಗಳ ಪ್ರಕಾರ, ಸಮಾನ ಮನಸ್ಕರನ್ನು ಒಗ್ಗೂಡಿಸಿ ತಳಮಟ್ಟದಲ್ಲಿ ಬಲಿಷ್ಠ ಸ್ವಯಂಸೇವಕರ ಜಾಲ ನಿರ್ಮಿಸುವ ಉದ್ದೇಶದಿಂದ ಈ ಹೊಸ ವೇದಿಕೆ ರೂಪುಗೊಳ್ಳಲಿದೆ. ಈ ಚಳವಳಿಗೆ ‘ಮಕ್ಕಳ್ ಶಕ್ತಿ ಇಯಕ್ಕಂ’ (ಜನಶಕ್ತಿ ಆಂದೋಲನ) ಎಂಬ ಹೆಸರು ಇಡಬಹುದೆಂಬ ಮಾತುಗಳು ಕೇಳಿಬರುತ್ತಿವೆ.
ಇತ್ತೀಚೆಗೆ ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಗೆ ಸಂಬಂಧಿಸಿದಂತೆ ಅಣ್ಣಾಮಲೈ ತಮ್ಮದೇ ಪಕ್ಷದ ನಿಲುವಿಗೆ ವಿರುದ್ಧವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸಿಬಿಎಸ್ಇ ಶಾಲೆಗಳಲ್ಲಿ ತ್ರಿಭಾಷಾ ನೀತಿಯನ್ನು ಕಡ್ಡಾಯಗೊಳಿಸುವ ಕ್ರಮ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಹೆಚ್ಚುವರಿ ಒತ್ತಡ ಉಂಟುಮಾಡಲಿದೆ ಎಂದು ಅವರು ಸಾರ್ವಜನಿಕವಾಗಿ ಆಕ್ಷೇಪಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಈ ಕುರಿತು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.
ಮಾಜಿ ಐಪಿಎಸ್ ಅಧಿಕಾರಿ ಆಗಿರುವ ಅಣ್ಣಾಮಲೈ 2020ರಲ್ಲಿ ರಾಜಕೀಯ ಪ್ರವೇಶಿಸಿದ್ದು, 2021ರಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
ತಮ್ಮ ಆಕ್ರಮಣಕಾರಿ ಭಾಷಣ ಶೈಲಿ ಹಾಗೂ ಸಂಘಟನಾ ಸಾಮರ್ಥ್ಯದ ಮೂಲಕ ರಾಜ್ಯದಲ್ಲಿ ಬಿಜೆಪಿಗೆ ಹೊಸ ಚೈತನ್ಯ ತುಂಬಿದ್ದರು.ಆದರೆ ದ್ರಾವಿಡ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಜಯಲಲಿತಾ ಕುರಿತ ಕೆಲವು ಹೇಳಿಕೆಗಳು ಎಐಎಡಿಎಂಕೆ ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದವು. ಇದರ ಪರಿಣಾಮವಾಗಿ ಬಿಜೆಪಿ-ಎಐಎಡಿಎಂಕೆ ಮೈತ್ರಿಯಲ್ಲಿ ಬಿರುಕು ಮೂಡಿತ್ತು. ಬಳಿಕ ಮತ್ತೆ ಮೈತ್ರಿ ಪುನರುಜ್ಜೀವನಗೊಳಿಸುವ ಪ್ರಯತ್ನಗಳ ನಡುವೆ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಅನಿವಾರ್ಯವಾಯಿತು ಎನ್ನಲಾಗಿದ್ದು, ಅಣ್ಣಾಮಲೈ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಲಾಯಿತು.
ಈ ನಡುವೆ ಅಣ್ಣಾಮಲೈ ಹೊಸ ಜನಾಂದೋಲನ ಆರಂಭಿಸಲು ಮುಂದಾಗಿರುವ ಸುದ್ದಿ ತಮಿಳುನಾಡು ರಾಜಕೀಯದಲ್ಲಿ ಕುತೂಹಲ ಹೆಚ್ಚಿಸಿದೆ. ಇದುವರೆಗೆ ಯಾವುದೇ ವಿಧಾನಸಭೆ ಅಥವಾ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದ ಅಣ್ಣಾಮಲೈ, ಜನರ ನಡುವೆ ನೇರ ಸಂಪರ್ಕ ಬೆಳೆಸಿ ಹೊಸ ರಾಜಕೀಯ ಅಧ್ಯಾಯ ಆರಂಭಿಸಲಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಚರ್ಚೆಗೆ ಕಾರಣವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















