Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ಕೋಟ್ಯಂತರ ಕನ್ನಡಿಗರ ಕನಸು ನನಸು ಮಾಡುವುದು ನನ್ನ ಪವಿತ್ರ ಕರ್ತವ್ಯ’: ಸಿಎಂ ಡಿ.ಕೆ.ಶಿವಕುಮಾರ್ ಭಾವುಕ ಪೋಸ್ಟ್!

---Advertisement---

ಸುದ್ದಿಒನ್,ಬೆಂಗಳೂರು,ಜೂನ್.03: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದ್ದು, ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪೋಸ್ಟ್ ಹಂಚಿಕೊಂಡಿದ್ದು, ತಮ್ಮ ಈ ಯಶಸ್ಸಿನ ಹಿಂದಿರುವ ಕನ್ನಡಿಗರ ಪ್ರೀತಿ ಮತ್ತು ಕಾರ್ಯಕರ್ತರ ತ್ಯಾಗವನ್ನು ಅತ್ಯಂತ ಭಾವುಕರಾಗಿ ಸ್ಮರಿಸಿದರು.

ಸಿಎಂ ಡಿ.ಕೆ.ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಏನಿದೆ?

………….ಜನರಿಂದ, ಜನರಿಗಾಗಿ, ಜನರಿಗೋಸ್ಕರ ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿ, ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ನನ್ನ ಪ್ರೀತಿಯ ಕರ್ನಾಟಕದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತ ಬಂಧುಗಳ ಆಶೀರ್ವಾದದಿಂದ ಲೋಕಭವನದಲ್ಲಿ ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದೆ. ಈ ಕ್ಷಣದಲ್ಲಿ ನಾನು ನಿಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ತಲೆಬಾಗುತ್ತೇನೆ.

ಇಂದು ನನ್ನ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ. ಈ ಅವಕಾಶವನ್ನು ನನಗೆ ಕರುಣಿಸಿದ ಹಿರಿಯರಿಗೆ, ಮಾರ್ಗದರ್ಶಕರಿಗೆ ಹಾಗೂ ನನ್ನ ಶಕ್ತಿಯಾಗಿ ನಿಂತ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು.

ವೇಗವಾಗಿ ಬದಲಾಗುತ್ತಿರುವ ಇಂದಿನ ತಂತ್ರಜ್ಞಾನದ ಯುಗದಲ್ಲಿ, ಹೊಸ ಆಲೋಚನೆಗಳೊಂದಿಗೆ ನಮ್ಮ ಹೆಮ್ಮೆಯ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ. ಈ ಸರ್ವತೋಮುಖ ಪ್ರಗತಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ನಮಗೆ ಮುಖ್ಯ.

ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಬನ್ನಿ, ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ ಎಂದು ನಾಡಿನ ಜನತೆಗೆ ಕರೆ ನೀಡಿದ್ದಾರೆ.

Join WhatsApp

Join Now

Join Telegram

Join Now