ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 30 : ಕೇಂದ್ರ ಸರ್ಕಾರದ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ದ್ವೇಷ ರಾಜಕಾರಣ ಖಂಡಿಸಿ ಬಿಜೆಪಿ ಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ. ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ಕುಮಾರ್ ಮಾತನಾಡಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಸುಲಭವಾಗಿ ಔಷಧಿಗಳು ಕೈಗೆಟುಕಲಿ ಎನ್ನುವ ಸದುದ್ದೇಶದಿಂದ ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳನ್ನು ತೆರೆದಿರುವುದನ್ನು ಉದ್ದೇಶಪೂರ್ವಕವಾಗಿ ರಾಜ್ಯ ಸರ್ಕಾರ ಮುಚ್ಚಲು ತೀರ್ಮಾನಿಸಿರುವುದು ನಿಜಕ್ಕೂ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಯಾವುದೇ ಕಾರಣಕ್ಕೂ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಬಾರದು ಎಂದು ಒತ್ತಾಯಿಸಿದರು.
ಬಿಜೆಪಿ.ಜಿಲ್ಲಾ ಖಜಾಂಚಿ ಮಾಧುರಿ ಗಿರೀಶ್ ಮಾತನಾಡಿ ದೇಶದಲ್ಲಿ ಹದಿನೈದು ಸಾವಿರಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿರುವುದರಿಂದ ಬಡವರಿಗೆ ಕಡಿಮೆ ದರದಲ್ಲಿ ಔಷಧಿಗಳು ಸಿಗುತ್ತಿವೆ. ರಾಜ್ಯದಲ್ಲಿ 1541 ಜನೌಷಧಿ ಕೇಂದ್ರಗಳಲ್ಲಿ ಬಡವರು ಔಷಧಿಗಳನ್ನು ಖರೀಧಿಸಿ ತಮ್ಮ ಪ್ರಾಣ ಉಳಿಸಿಕೊಳ್ಳುತ್ತಿದ್ದಾರೆ. ಇದನ್ನು ಸಹಿಸದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.
ಬಿಜೆಪಿ. ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾತನಾಡಿ ರಾಜ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಕೇಂದ್ರ ಸರ್ಕಾರದ ಜನೌಷಧಿ ಕೇಂದ್ರಗಳನ್ನು ಮುಚ್ಚಿ ಬಡವರಿಗೆ ಅನ್ಯಾಯವೆಸಗುತ್ತಿದೆ. ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಏಕಾಏಕಿಯಾಗಿ ಮುಚ್ಚಿರುವುದರ ಹಿಂದೆ ರಾಜಕೀಯ ಕುತಂತ್ರವಿದೆ. ಬಡವರಿಗೆ ವರದಾನವಾಗಿರುವ ಜನೌಷಧಿ ಕೇಂದ್ರಗಳು ಮತ್ತೆ ತೆರೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗವುದೆಂದು ಎಚ್ಚರಿಸಿದರು.
ಬಿಜೆಪಿ.ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶೈಲಜಾರೆಡ್ಡಿ ಮಾತನಾಡುತ್ತ ದೇಶದ ಪ್ರಧಾನಿ ನರೇಂದ್ರಮೋದಿರವರು ಬಡವರಿಗೆ ಹೊರೆಯಾಗದಂತೆ ಸುಲಭವಾಗಿ ಔಷಧಿಗಳು ಕೈಗೆಟುಕಲಿ ಎನ್ನುವ ಕಾರಣಕ್ಕಾಗಿ ದೇಶಾದ್ಯಂತ ಜನೌಷಧಿ ಕೇಂದ್ರಗಳನ್ನು ತೆರೆದಿರುವುದನ್ನು ರಾಜ್ಯದ ಮುಖ್ಯಮಂತ್ರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಆಯುಷ್ಮಾನ್ ಭಾರತ್ ಬಡವರ ಪಾಲಿಗೆ ಸಂಜೀವನಿಯಾಗಿದೆ. ಮುಚ್ಚುವುದು ಏಕೆ? ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆಂದು ಬೆದರಿಕೆ ಹಾಕಿದರು.
ಬಿಜೆಪಿ. ನಗರ ಮಂಡಲ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ವಕ್ತಾರ ನಾಗರಾಜ್ಬೇದ್ರೆ, ಮಾಧ್ಯಮ ಪ್ರಮುಖ ತಿಪ್ಪೇಸ್ವಾಮಿ ಛಲವಾದಿ, ನವೀನ್ ಚಾಲುಕ್ಯ, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ವಿರುಪಾಕ್ಷಿ, ಬಸಮ್ಮ, ನಾಗರಾಜ್, ಶಾಂತಮ್ಮ, ಅರುಣ, ಗಾಯತ್ರಿ, ವೀಣ, ಕಾಂಚನ, ಕವಿತ, ಸುಮ,
ಟಿ.ಬಸವರಾಜಪ್ಪ, ಭರತ್ಕುಮಾರ್, ಅಂಬೇಡ್ಕರ್ ದಲಿತ ಸೇನೆ ಕಾರ್ಯದರ್ಶಿ ರಿಶಿ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
