ಬೆಂಗಳೂರು.ಆಗಸ್ಟ್.10: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣವೇ ತಡೆಯಬೇಕು ಹಾಗೂ ಮೇಕೆದಾಟು, ಮಹದಾಯಿ ಯೋಜನೆಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕದಲ್ಲಿ ಪ್ರತಿಭಟನೆಯ ಬಿಸಿ ಹೆಚ್ಚಿಸಿವೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಆ. 13ರ ಬಂದ್ ಯಶಸ್ವಿಯಾಗಲು ಜಾಗೃತಿ ಅಭಿಯಾನ ಆರಂಭಿಸಲಾಗಿದ್ದು, ಸೋಮವಾರ ನಡೆಯುವ ಗಡಿ ತಡೆ ಚಳವಳಿಯಲ್ಲಿ ವಿವಿಧ ಕನ್ನಡಪರ ಒಕ್ಕೂಟಗಳ ಪ್ರಮುಖ ನಾಯಕರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಆಗಸ್ಟ್ 13 ರಂದು ‘ಕರ್ನಾಟಕ ಬಂದ್’ ಕರೆ ನೀಡಲಾಗಿದ್ದು, ಇದರ ಮುನ್ನೆಚ್ಚರಿಕೆಯಾಗಿ ಸೋಮವಾರ ಮಧ್ಯಾಹ್ನ 12:30ಕ್ಕೆ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಯನ್ನು ಸಂಪೂರ್ಣವಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಆಗಸ್ಟ್ 13ರಂದು ಕರ್ನಾಟಕ ಬಂದ್ ನಡೆದೇ ನಡೆಯುತ್ತದೆ. ಪೂರ್ವಭಾವಿಯಾಗಿ ಸೋಮವಾರ ಮಧ್ಯಾಹ್ನ 12:30ಕ್ಕೆ ಅತ್ತಿಬೆಲೆ ಗಡಿ ಬಂದ್ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.










