ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ಯೂರಿಯಾ ಗೊಬ್ಬರಕ್ಕಾಗಿ ರೈತರು ಪರದಾಡುತ್ತಿರುವುದರಿಂದ ಕೃಷಿ ಸಚಿವ ಚೆಲುವರಾಯಸ್ವಾಮಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ಗೊಬ್ಬರದಂಗಡಿಗಳಿಗೆ ಹೋಗಿ ರೈತರು ಗೊಬ್ಬರ ಕೇಳಿದರೆ ಒಂದು ಯೂರಿಯಾ ಪಾಕೆಟ್ಗೆ ಒಂದು ಲಿಂಕ್ ತೆಗೆದುಕೊಂಡು 750 ರೂ.ಗಳನ್ನು ಕೇಳುತ್ತಿದ್ದಾರೆ. ಲಿಂಕ್ ಬೇಡವೆಂದರೆ ಗೊಬ್ಬರ ಇಲ್ಲವೆಂಬ ಉತ್ತರ ಕೊಡುತ್ತಿದ್ದಾರೆ. ಒಂದು ಪಾಕೆಟ್ ಗೊಬ್ಬರಕ್ಕಾಗಿ ರೈತ ಸರತಿ ಸಾಲಿನಲ್ಲಿ ನಿಂತು ಪಡೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಾಳಜಿಯಿಲ್ಲದಂತಾಗಿದೆ. ಹಾಗಾಗಿ ಕೃಷಿ ಸಚಿವರು ಕೂಡಲೆ ರಾಜಿನಾಮೆ ಸಲ್ಲಿಸಬೇಕೆಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ ಲಿಂಗಾವರಹಟ್ಟಿ, ಪ್ರಧಾನ ಕಾರ್ಯದರ್ಶಿ ಮಾರುತಿ, ಉಪಾಧ್ಯಕ್ಷ ನಿಜಲಿಂಗಪ್ಪ, ತಾಲ್ಲೂಕು ಅಧ್ಯಕ್ಷ ಶಿವಮೂರ್ತಿ, ಹಿರಿಯೂರು ತಾಲ್ಲೂಕು ಅಧ್ಯಕ್ಷ ರಂಗಸ್ವಾಮಿ, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ನಾಗರಾಜ, ನಗರ ಘಟಕದ ಅಧ್ಯಕ್ಷ ಸೈಯದ್ ಮಮ್ತಾಜ್
ಮಹಿಳಾಧ್ಯಕ್ಷೆ ಲೋಕಾಕ್ಷಮ್ಮ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.







