Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕವಾಡಿಗರಹಟ್ಟಿ ಪ್ರಕರಣ: ಮೃತರ ಕುಟುಂಬಕ್ಕೆ ತಕ್ಷಣ ಪರಿಹಾರಕ್ಕೆ ಕ್ರಮ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

---Advertisement---

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ (ಆ.04): ಕವಾಡಿಗರಹಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ತಕ್ಷಣವೇ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಚಿತ್ರದುರ್ಗ ಸಂಸದರಾದ ಎ.ನಾರಾಯಣಸ್ವಾಮಿ ಹೇಳಿದರು.

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಯುರಾಲಜಿ ವಿಭಾಗ ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕವಾಡಿಗರ ಹಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಕುರಿತು ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಸಭೆ ನಡೆಸಿ ಚರ್ಚಿಸುತ್ತೇನೆ. ಸಾರ್ವಜನಿಕರು ಮಾಡಿರುವ ಆರೋಪಗಳ ಕುರಿತು ಸರ್ಕಾರದೊಂದಿಗೆ ಮಾತನಾಡಿ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ದುರ್ಘಟನೆ ನಡೆಯಲು ಯಾರದಾದರೂ ಕೈವಾಡ ಇದೆಯಾ ಅಥವಾ ಶಾಂತಿ ಸಾಗರದಿಂದ ನೀರು ಸರಬರಾಜು ವೇಳೆಯಲ್ಲಿ ಎಲ್ಲಾದರೂ ಲೋಪದೋಷ ಆಗಿದೆಯಾ ಎಂಬುದನ್ನು ಪರಿಶೀಲಿಸಲು ತಂಡವನ್ನು ರಚಿಸಲಾಗುವುದು. ಜಿಲ್ಲೆಯ ಯಾವುದೇ ಭಾಗದಲ್ಲೂ ಇಂತಹ ಘಟನೆ ಮರುಕಳಿಸದ ಹಾಗೆ ಮುಂಜಾಗೃತೆ ವಹಿಸಿ ಎಲ್ಲಾ ಕುಡಿಯುವ ನೀರಿನ ಮೂಲಗಳ ವರದಿಯನ್ನು ವಾರದ ಒಳಗೆ ತರಿಸಿಕೊಳ್ಳಲಾಗುವುದು ಎಂದರು.

ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಜನರು ಆಸ್ಪತ್ರೆಗೆ ದಾಖಲಾದ ಕುರಿತು ಮಾಧ್ಯಮದಲ್ಲಿ ವರದಿ ಬಂದ ತಕ್ಷಣವೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಪ್ರಾಥಮಿಕ ಮಾಹಿತಿ ಪಡೆದುಕೊಳ್ಳಲಾಗಿದೆ.  ಮರುಕ್ಷಣವೇ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಡಿಹೆಚ್‍ಓಗೂ ಕರೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೆ. ಅಧಿಕಾರಿಗಳು ಘಟನೆಗೆ ತಕ್ಷಣ ಸ್ಪಂದಿಸಿ, ಮಕ್ಕಳು, ವೃದ್ದರೂ ಸೇರಿದಂತೆ ಎಲ್ಲರಿಗೂ ಉತ್ತಮ ಚಿಕಿತ್ಸೆ ನೀಡಿದ್ದಾರೆ.

ಇದುವರೆಗೂ ಘಟನೆಯಲ್ಲಿ 5 ಜನರು ಜೀವ ತೆತ್ತಿದ್ದಾರೆ. ನಿನ್ನೆ ಬಂದ ನೀರಿನ ಮಾದರಿಗಳ ವಿಧಿ ವಿಜ್ಞಾನ ವರದಿಯು ಸಹ ಕುಡಿಯುವ ನೀರಿಗೆ ಯಾವುದೇ ವಿಷ ಬೆರತಿಲ್ಲ ಎಂದು ಹೇಳಿದೆ. ಆದರೂ ಸಾರ್ವಜನಿಕರ ದೂರನ್ನು ಪರಿಗಣನೆಗೆ ತೆಗೆದುಕೊಂಡು ಮೃತರ ಮರಣೋತ್ತರ ಪರೀಕ್ಷೆ ನಡೆಸಲು ಸೂಚಿಸಿದ್ದೇನೆ. ಮರಣೋತ್ತರ ಪರೀಕ್ಷೆಯಲ್ಲಿ ಸಾವಿನ ಕಾರಣ ತಿಳಿದು ಬರಲಿದೆ. ನೀರಿನ ಮಾದರಿಯ ವಿಧಿ ವಿಜ್ಞಾನ ವರದಿ ಹಾಗೂ ಮರಣೋತ್ತರ ಪರೀಕ್ಷೆ ವರದಿಗಳನ್ನು ಪರಿಶೀಲಿಸಿ ಮುಂದಿನ ಅಂಶಗಳನ್ನು ಚರ್ಚಿಸಲಾಗುವುದು. ಇದರ ಮೇಲೆಯೂ ನೀರಿನ ಕಲುಷಿತಕ್ಕೆ ಕಾರಣ ಕಂಡುಹಿಡಿದು ವರದಿ ನೀಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ.

ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿದ್ದರಿಂದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಅಸ್ವಸ್ಥರ ಮೇಲೆ ನಿಗಾ ವಹಿಸಲು ಹಾಗೂ ಘಟನೆಯ ಕಾರಣಗಳನ್ನು ವಿಶ್ಲೇಷಿಸಲು ರಾಜ್ಯ ಮಟ್ಟದಿಂದ ತಜ್ಞರ ಸಮಿತಿ ಕರೆಸಲು ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದರಂತೆ ಸರ್ಕಾರ ತಜ್ಞರ ಸಮಿತಿ ನೇಮಿಸಿ ಜಿಲ್ಲೆಗೆ ಕಳುಹಿಸಿಕೊಟ್ಟಿದೆ ಎಂದರು.

ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲಾಡಳಿತ ಸದಾ ಕಾಲ ನಿಮ್ಮ ಸೇವೆಗೆ ಸಿದ್ದವಿದೆ. ಸಂಸತ್ ಅಧಿವೇಶನದಲ್ಲಿ ನನ್ನ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ನೀಡಬೇಕಾಗಿತ್ತು. ಸಂಸತ್ ನಡೆಯುವ ವೇಳೆಯಲ್ಲಿ ಲೋಕಸಭಾಧ್ಯಕ್ಷರ ಅನುಮತಿ ಮೇರೆಗೆ ನಾನು ಮರಳಿ ಬರಬೇಕಾದ್ದರಿಂದ ಘಟನೆ ನಡೆದ ತಕ್ಷಣವೇ ಬಂದು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಇದೇ ವೇಳೆ ಸ್ಪಷ್ಟ ಪಡಿಸಿದರು.

ಈ ಸಂದರ್ಭದಲ್ಲಿ ಮಾದಾರ ಚನ್ನಯ್ಯ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಬಸವರಾಜ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...