Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕವಾಡಿಗರಹಟ್ಟಿ ಪ್ರಕರಣ: ತನಿಖೆಯ ವರದಿ ಆಧರಿಸಿ ಕಠಿಣ ಕ್ರಮ : ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಹೇಳಿಕೆ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ,(ಆ.6) : ಕವಾಡಿಗರಹಟ್ಟಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ತನಿಖೆ ಆರಂಭವಾಗಿದೆ. ತನಿಖೆಯ ವರದಿ ಆಧರಿಸಿ, ತಪ್ಪು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ತಿಳಿಸಿದರು.

ಇಲ್ಲಿನ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಸಂತ್ರಸ್ಥರ ಭೇಟಿ ಹಾಗೂ ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಚಿತ್ರದುರ್ಗ ನಗರದ ವ್ಯಾಪ್ತಿಯ ಯಾವುದೇ ವಾರ್ಡ್‍ನಲ್ಲಿ ಸಮಸ್ಯೆಯಾಗಿಲ್ಲ. ಕವಾಡಿಗರಹಟ್ಟಿಯಲ್ಲಿ ಮಾತ್ರ ಸಮಸ್ಯೆಯಾಗಿದ್ದು, ಕವಾಡಿಗರಹಟ್ಟಿ ಕಲುಷಿತ ನೀರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಲೊನಿಯ ಪ್ರತಿ ಮನೆ ಮನೆಯನ್ನೂ ಪರೀಕ್ಷೆ ಮಾಡಲು ಸೂಚಿಸಲಾಗಿದ್ದು, ಈಗಾಗಲೇ ಪರೀಕ್ಷೆ ಪ್ರಾರಂಭವಾಗಿದ್ದು, ಇನ್ನೆರೆಡು ದಿನಗಳಲ್ಲಿ ಸಂಪೂರ್ಣ ವರದಿ ಬರುವ ನಿರೀಕ್ಷೆ ಇದ್ದು,  ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರ್ಲಕ್ಷೆ, ಕರ್ತವ್ಯಲೋಪ ತೋರಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಎಫ್‍ಎಸ್‍ಎಲ್ ವರದಿ ಮರು ತನಿಖೆ: ಕವಾಡಿಗರಹಟ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್‍ಎಸ್‍ಎಲ್ ವರದಿಯನ್ನು ಮರು ತನಿಖೆ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದ್ದು, ಈ ಕುರಿತು ಅಗತ್ಯ ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಎಫ್‍ಎಸ್‍ಎಲ್ ವರದಿ ಕುರಿತಂತೆ ಸಾರ್ವಜನಿಕ ಅನುಮಾನ ವ್ಯಕ್ತಪಡಿಸುತ್ತಿದ್ದು, ಎಸ್‍ಎಸ್‍ಎಲ್ ವರದಿಯನ್ನು ಮರು ತನಿಖೆ ಮಾಡುವ ಮೂಲಕ ಸಾರ್ವಜನಿಕರ ಅನುಮಾನವನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ನಗರದ ವ್ಯಾಪ್ತಿಯ ಜಲಸಂಗ್ರಹಾಗಾರಗಳು ಓವರ್ ಹೆಡ್ ಟ್ಯಾಂಕ್‍ಗಳು, ಸಣ್ಣ ನೀರಿನ ಟ್ಯಾಂಕ್‍ಗಳನ್ನು ಸ್ವಚ್ಚಗೊಳಿಸುವ ಅನುದಾನ ದುರುಪಯೋಗ ಪಡಿಸಿಕೊಂಡು ಶುಚಿಗೊಳಿಸದ ಪರಿಣಾಮ ಇಂತಹ ದುರ್ಘಟನೆಗೆ ಸಂಭವಿಸಿವೆ ಎಂಬ ದೂರುಗಳು ಕೇಳಿ ಬಂದಿವೆ. ಕವಾಡಿಗರಹಟ್ಟಿ ಕಾಲೊನಿಯ ಟ್ಯಾಂಕ್ ಮೇಲ್ನೋಟಕ್ಕೆ ಹಾಗೆಯೇ ಕಾಣುತ್ತಿದೆ. ಈ ಕುರಿತು ಸಮಗ್ರ ವರದಿ ಪಡೆಯಲಾಗುವುದು ಎಂದರು.

ಅಧಿಕಾರಿ, ಸಿಬ್ಬಂದಿಗಳ ಅಮಾನತು ಪ್ರಕರಣಕ್ಕೆ ಪರಿಹಾರವಲ್ಲ. ತನಿಖೆ ಆದ ಮೇಲೆಯೂ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಸೂಕ್ತ ಕ್ರಮಕೈಗೊಳ್ಳಲಾಗುವುದು. ಸಮಸ್ಯೆ ಉಂಟಾದಾಗ ಮಾತ್ರ ಅಧಿಕಾರಿಗಳು ಬರುತ್ತಾರೆ ಎಂಬ ದೂರುಗಳು ಇವೆ. ಆದರೆ ಸಮಸ್ಯೆ ಉದ್ಭವಿಸದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿಸಬೇಕು. ಹೀಗಾಗಿ ಮುಂಜಾಗ್ರತಾ ಕ್ರಮಕೈಗೊಳ್ಳದವರ ವಿರುದ್ಧವೂ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಮೃತ ಕುಟುಂಬಕ್ಕೆ ತಲಾ ರೂ.25 ಲಕ್ಷ ರೂ ಪರಿಹಾರಕ್ಕೆ ಬೇಡಿಕೆ ಮುಂದಿಟ್ಟಿದ್ದಾರೆ ಎಂಬ ಪ್ರಶ್ನಿಗೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ತಲಾ 10 ಲಕ್ಷ ರೂ. ವಿತರಿಸಲಾಗಿದೆ. ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಸೇರಿದಂತೆ ಪರಿಹಾರ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಭೇಟಿ ಮಾಡಲಿದ್ದೇವೆ ಎಂದರು.

ಮೃತ ಕುಟುಂಬಗಳಿಗೆ ಸಾಂತ್ವನ: ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಕವಾಡಿಗರಹಟ್ಟಿಗೆ ಭೇಟಿ ನೀಡಿ, ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ನಂತರ ನಗರದ ಜಿಲ್ಲಾಸ್ಪತ್ರೆ ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ, ಅಸ್ವಸ್ಥರ ಯೋಗ-ಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ, ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕಿ ಎನ್.ಮಂಜುಶ್ರೀ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment