ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಜನಾಕ್ರೋಶ ಯಾತ್ರೆ ನಾಳೆ ಬೆಳಿಗ್ಗೆ 11 ಕ್ಕೆ ಚಿತ್ರದುರ್ಗ ಪ್ರವೇಶಿಸಬೇಕಿತ್ತು. ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿರುವ ದಾಳಿಗೆ 26 ಮಂದಿ ಬಲಿಯಾಗಿದ್ದು, ಕರ್ನಾಟಕದ ಇಬ್ಬರ ಮೃತದೇಹಗಳು ರಾಜ್ಯಕ್ಕೆ ಬರುತ್ತಿರುವುದರಿಂದ ಶೋಕ ವ್ಯಕ್ತಪಡಿಸುವುದಕ್ಕಾಗಿ ಜನಾಕ್ರೋಶ ಯಾತ್ರೆಯನ್ನು ಮುಂದೂಡಿರುವುದಾಗಿ ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದರು.
ಬಿಜೆಪಿ.ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಜೆ ನಗರದಲ್ಲಿ ಮೌನ ಮೆರವಣಿಗೆ ನಡೆಸಿ ದಾಳಿಯಲ್ಲಿ ಬಲಿಯಾದವರ ಆತ್ಮಕ್ಕೆ ಶಾಂತಿ ಕೋರಲಾಗುವುದೆಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ಪ್ರವಾಸಿ ತಾಣ ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳು ನಡೆಸಿರುವ ದಾಳಿಯಲ್ಲಿ 26 ಮಂದಿ ಅಮಾಯಕರು ಬಲಿಯಾಗಿರುವುದನ್ನು ನಾವುಗಳು ಖಂಡಿಸುತ್ತೇವೆ. ದುಷ್ಟಕೂಟಕ್ಕೆ ನಮ್ಮ ದೇಶದ ಪ್ರಧಾನಿ ಮೋದಿರವರು ತಕ್ಕ ಪಾಠ ಕಲಿಸದೆ ಬಿಡುವುದಿಲ್ಲ. ದಾಳಿಯಲ್ಲಿ ಬಲಿಯಾದವರಿಗೆ ಸಂಜೆ ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕ್ಯಾಂಡಲ್ ಮೆರವಣಿಗೆ ನಡೆಸಲಾಗುವುದೆಂದರು.
ಪಾಕಿಸ್ಥಾನ ಬೆಂಬಲಿತ ಉಗ್ರಗಾಮಿಗಳು ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿ ದೇಶದ ಶಾಂತಿಯನ್ನು ಕದಡುತ್ತಿದ್ದಾರೆ. ನಮ್ಮ ದೇಶದ ಪ್ರಧಾನಿ ಮೋದಿ ಹಾಗೂ ಗೃಹಮಂತ್ರಿ ಅಮಿತ್ಷಾ ಇವರುಗಳು ಉಗ್ರಗಾಮಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ. ಪ್ರವಾಸಿಗರು ಯಾರೂ ಭಯ ಪಡುವುದು ಬೇಡ ಎಂದರು.
ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ನೇಮಕಾತಿಯಲ್ಲಿ ಮಾನದಂಡಗಳನ್ನು ಗಾಳಿಗೆ ತೂರಿ ಲಕ್ಷಾಂತರ ರೂ.ಗಳ ಅವ್ಯವಹಾರವಾಗಿರುವುದು ತನಿಖೆಯಾಗಬೇಕು. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಚಿತ್ರದುರ್ಗಕ್ಕೆ ಆಗಮಿಸಿ ನೇಮಕಾತಿಯಲ್ಲಿ ಆಗಿರುವ ಭ್ರಷ್ಟಾಚಾರದ ಬಗ್ಗೆ ಗಮನ ಕೊಡಬೇಕು. ಕೆ.ಡಿ.ಪಿ.ಸಭೆಯಲ್ಲಿ ಇಂತಹ ವಿಷಯಗಳು ಚರ್ಚೆಗೆ ಬರುವುದಿಲ್ಲ. 2013 ರಲ್ಲಿ ಮೆಡಿಕಲ್ ಕಾಲೇಜು ಮಂಜೂರಾಗಿದ್ದು, 2025 ರಲ್ಲಿ ಆರಂಭಗೊಂಡಿದೆ. ನೇಮಕಾತಿ ಅವ್ಯವಹಾರದಲ್ಲಿ ಭಾಗಿಯಾಗಿರುವವರನ್ನು ಕೂಡಲೆ ಸೇವೆಯಿಂದ ವಜಾಗೊಳಿಸಬೇಕು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್ ಪಾಟೀಲ್ರವರಿಗೆ ಪತ್ರ ಬರೆಯುತ್ತೇನೆಂದು ತಿಳಿಸಿದರು.
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಭಾರತದ ಪ್ರವಾಸಿ ತಾಣ ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಗೆ 26 ಮಂದಿ ಬಲಿಯಾಗಿರುವುದು ಅತ್ಯಂತ ಖಂಡನೀಯ. ಈ ವಿಚಾರದಲ್ಲಿ ಯಾವ ಪಕ್ಷಗಳು ರಾಜಕಾರಣ ಮಾಡಬಾರದು. ದೇಶದ ಐಕ್ಯತೆ ದೃಷ್ಟಿಯಿಂದ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು. ಪುಲ್ವಾಮಾ ದಾಳಿ ನಡೆದಾಗ ಅದಕ್ಕೆ ಪ್ರತಿಯಾಗಿ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲಾ ಎಂದು ವಿರೋಧ ಪಕ್ಷದವರು ಗೇಲಿ ಮಾಡಿದ್ದುಂಟು. ಒಟ್ಟಾರೆ
ಪಹಲ್ಗಾಮ್ ದಾಳಿಗೆ ರಾಜಕೀಯ ಬಣ್ಣ ಹಚ್ಚುವುದು ಬೇಡ ಎಂದರು.
ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್ಸಿದ್ದಾಪುರ, ಸಂಪತ್, ನಗರ ಮಂಡಲ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ಕರ್ನಾಟಕ ರಾಜ್ಯ ರೈತ ಮೋರ್ಚ ಕಾರ್ಯದರ್ಶಿ ಮಲ್ಲಿಕಾರ್ಜುನ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ಯಾದವ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್ಬೇದ್ರೆ, ಛಲವಾದಿ ತಿಪ್ಪೇಸ್ವಾಮಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.


