ಕರ್ನಾಟಕ ರಾಜಕೀಯದಲ್ಲಿ ಕಳೆದ ಹಲವು ತಿಂಗಳುಗಳಿಂದ ಸದ್ದು ಮಾಡುತ್ತಿದ್ದ ನಾಯಕತ್ವ ಬದಲಾವಣೆ ವಿಚಾರಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮೂರು ವರ್ಷಗಳ ಅವರ ಆಡಳಿತಕ್ಕೆ ಅಧಿಕೃತ ಅಂತ್ಯ ಬಂದಿದೆ.ಸಿದ್ದರಾಮಯ್ಯ ರಾಜೀನಾಮೆಯ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಪ್ರಮಾಣವಚನಕ್ಕೆ ಸಕಲ ಸಿದ್ಧತೆ ಆರಂಭಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ರಾಜೀನಾಮೆ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣವೇ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಅಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸಲಿರುವ ಡಿಕೆಶಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ, ಹೊಸ ಸಚಿವ ಸಂಪುಟ ರಚನೆ ಹಾಗೂ ಉಪಮುಖ್ಯಮಂತ್ರಿ ಹುದ್ದೆಗಳ ಹಂಚಿಕೆ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಅಂತಿಮ ಮಾತುಕತೆ ನಡೆಯಲಿದೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ಲಭ್ಯವಾಗಿದೆ.
ಇನ್ನೊಂದೆಡೆ, ಮುಖ್ಯಮಂತ್ರಿ ಪ್ರಮಾಣವಚನದ ದಿನಾಂಕ ಮತ್ತು ಮುಹೂರ್ತ ನಿಗದಿಗೆ ಡಿಕೆ ಶಿವಕುಮಾರ್ ಇದೀಗ ಜ್ಯೋತಿಷಿಗಳ ಸಲಹೆ ಪಡೆದಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಡಿಕೆ ಶಿವಕುಮಾರ್ ಅವರು ತಮ್ಮ ಆಪ್ತ ಜ್ಯೋತಿಷಿ ದ್ವಾರಕನಾಥ್ ಗುರೂಜಿಗೆ ದೂರವಾಣಿ ಕರೆ ಮಾಡಿ ಪ್ರಮಾಣವಚನಕ್ಕೆ ಶುಭ ಮುಹೂರ್ತ ಸೂಚಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಮೂರು ಬೇರೆ ಬೇರೆ ದಿನಾಂಕಗಳನ್ನು ನೀಡುವಂತೆ ಕೇಳಿಕೊಂಡಿರುವ ಡಿಕೆಶಿ, ಹೈಕಮಾಂಡ್ ನಾಯಕರ ಲಭ್ಯತೆ ಆಧರಿಸಿ ಅಂತಿಮ ದಿನಾಂಕ ನಿಗದಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಡಿಕೆ ಶಿವಕುಮಾರ್ ಪ್ರಮಾಣವಚನ ಸಮಾರಂಭಕ್ಕೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭಾಗವಹಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ರಾಜ್ಯ ನಾಯಕತ್ವ ಬದಲಾವಣೆಯನ್ನು ಭರ್ಜರಿಯಾಗಿ ಪ್ರದರ್ಶಿಸಲು ಸಿದ್ಧತೆ ನಡೆಸಿದೆ ಎಂಬ ಮಾತು ಕೇಳಿಬರುತ್ತಿದೆ.ಆದರೆ, ಪ್ರಮಾಣವಚನ ಯಾವ ದಿನ ನಡೆಯಲಿದೆ? ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ? ಡಿಸಿಎಂ ಹುದ್ದೆ ಯಾರ ಪಾಲಾಗಲಿದೆ? ಎಂಬ ಪ್ರಶ್ನೆಗಳು ಇನ್ನೂ ರಾಜಕೀಯ ವಲಯದಲ್ಲಿ ನಿಗೂಢವಾಗಿಯೇ ಉಳಿದಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















