ಬೆಂಗಳೂರು/ವಿಜಯಪುರ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಹೋರಾಟದ ಪ್ರಮುಖ ಮುಖವಾಗಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಪ್ರಕರಣ ರಾಜ್ಯ ರಾಜಕೀಯ ಮತ್ತು ಸಮಾಜದಲ್ಲಿ ಸಂಚಲನ ಮೂಡಿಸಿದೆ.ಬೆಂಗಳೂರಿನ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ತಿಳಿದುಬಂದಿದ್ದು, ತಮ್ಮ ಮೇಲಿನ ಅಸಭ್ಯ ವರ್ತನೆ ಮತ್ತು ವಿಡಿಯೋ ಕಾಲ್ ಮೂಲಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
ದೂರಿನ ಪ್ರಕಾರ, ಸ್ವಾಮೀಜಿ ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ದೈಹಿಕವಾಗಿ ತಪ್ಪಾಗಿ ವರ್ತಿಸಿದ್ದು, ತಿಳಿಯದೆ ವಿಡಿಯೋ ಚಿತ್ರೀಕರಿಸಿ ನಂತರ ಅದನ್ನು ಬಳಸಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ.ಈ ಆರೋಪಗಳು ಹೊರಬಿದ್ದ ಬೆನ್ನಲ್ಲೇ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಸ್ವಾಮೀಜಿ ಕೂಡ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. ಮಹಿಳೆ ಹಣಕ್ಕಾಗಿ ಒತ್ತಡ ಹೇರಿದ್ದಾಳೆ ಮತ್ತು ಮೂರು ಕೋಟಿ ರೂಪಾಯಿ ನೀಡದಿದ್ದರೆ ಅಪಪ್ರಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸ್ವಾಮೀಜಿ ಹೇಳುವಂತೆ, ಮಹಿಳೆ ಅನಾಥಾಶ್ರಮ ನಡೆಸುವ ನೆಪದಲ್ಲಿ ಪರಿಚಯ ಮಾಡಿಕೊಂಡು ನಂತರ ಹಣಕಾಸಿನ ನೆರವು ಕೇಳುತ್ತಿದ್ದಳು. ಹಣ ನೀಡಲು ನಿರಾಕರಿಸಿದ ಬಳಿಕ ಸುಳ್ಳು ಆರೋಪಗಳನ್ನು ಮಾಡಿ ಬ್ಲಾಕ್ಮೇಲ್ ಮಾಡಲು ಯತ್ನಿಸಿದ್ದಾಳೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ, ತಮ್ಮ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆಗಳನ್ನೂ ಅವರು ಪ್ರಸ್ತಾಪಿಸಿದ್ದಾರೆ.ಇನ್ನೊಂದೆಡೆ, ಮಹಿಳಾ ಆಯೋಗವು ದೂರು ಕುರಿತು ಪ್ರಾಥಮಿಕ ಪರಿಶೀಲನೆ ನಡೆಸುತ್ತಿದ್ದು, ದೂರು ನೀಡಿದ ವ್ಯಕ್ತಿಯ ವಿವರಗಳ ಪರಿಶೀಲನೆ ನಡೆಯುತ್ತಿದೆ. ದೂರುದಾರರ ಮಾಹಿತಿ ಸ್ಪಷ್ಟವಾಗಿಲ್ಲ ಎಂಬ ಸಂಗತಿಯೂ ಹೊರಬಂದಿದೆ.
ಪರಸ್ಪರ ಆರೋಪ-ಪ್ರತ್ಯಾರೋಪಗಳಿಂದ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸತ್ಯಾಸತ್ಯತೆ ತಿಳಿಯಲು ಪೊಲೀಸ್ ಮತ್ತು ಸಂಬಂಧಿತ ಅಧಿಕಾರಿಗಳಿಂದ ಸಮಗ್ರ ತನಿಖೆ ಮುಂದುವರಿದಿದೆ.












