ಬೆಳಗಾವಿ; ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯ ಸಿಎಂ ಬದಲಾವಣೆ ಚರ್ಚೆ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ನಲ್ಲಿ ದಲಿತ ನಾಯಕರ ಚರ್ಚೆ ಹೊಸದೇನು ಅಲ್ಲ. ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಈ ಚರ್ಚೆ ಸದ್ದು ಮಾಡಿ ಸುಮ್ಮನಾಗುತ್ತದೆ. ಇದೀಗ ಬಿಜೆಪಿಯ ಸಂಸದ ಗೋವಿಂದ ಕಾರಜೋಳ ಅವರು ಕಾಂಗ್ರೆಸ್ ಪಕ್ಷಕ್ಕೆ ದಲಿತ ಸಿಎಂ ಬಗ್ಗೆ ಸಲಹೆಯೊಂದನ್ನ ನೀಡಿದ್ದಾರೆ. ದಲಿತರ ಪರವಾಗ ಬ್ಯಾಟ್ ಬೀಸಿದ್ದಾರೆ.
ಸಿದ್ದರಾಮಯ್ಯ ಅವರು ಜನರಿಗೆ ಮೋಸ ಮಾಡುವ ಕೆಲಸ ಮಾಡಿದ್ದಾರೆ. ಕಳೆದ ಬಾರಿ ಬಜೆಟ್ ಮಂಡನೆ ಮಾಡಿದ್ದರ ಪೈಕಿ ಒಂದೂವರೆ ಲಕ್ಷ ಕೋಟಿ ಬಾಕಿ ಇದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ. ನಿತ್ಯವೂ ಕೊಲೆ ಸುಲಿಗೆ ಆಗುತ್ತಿದೆ. ಅಂತರ್ ರಾಜ್ಯದವರು ಬಂದು ಕಳ್ಳತನ ಮಾಡುತ್ತಿದ್ದಾರೆ. ಜನರಿಗೆ ರಕ್ಷಣೆ ಇಲ್ಲದಂತೆ ಆಗಿದೆ. ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಪುಂಡರ ಹಾವಳಿ, ಪುಂಡಾಟಿಕೆ ಜಾಸ್ತಿಯಾಗಿದೆ. ಸರ್ಕಾರದ ಹಿಡಿತ ತಪ್ಪಿ ಹೋಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಅತಿ ಹೆಚ್ಚು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅವರು ಕೂಡಲೇ ರಾಜೀನಾಮೆ ನೀಡಬೇಕು ಚುನಾವಣೆ ಎದುರಿಸಬೇಕು ಎಂದಿದ್ದಾರೆ.
ಇದೇ ವೇಳೆ ದಲಿತ ಸಿಎಂ ಬಗ್ಗೆ ಮಾತನಾಡಿ, ದಲಿತ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಈಗ ದಲಿತ ಮುಖ್ಯಮಂತ್ರಿ ಮಾಡಲು ಅವಕಾಶವಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದಲಿತ ನಾಯಕರಲ್ಲಿ ಯಾರನ್ನಾದರೂ ಒಬ್ಬರನ್ನ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಸದ್ಯ ಗೃಹ ಸಚಿವ ಜಿ.ಪರಮೇಶ್ವರ್, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರನ್ನು ಸಿಎಂ ಮಾಡಲಿ. ಇಲ್ಲವೇ ಸ್ಚತಃ ಮಲ್ಲಿಕಾರ್ಜುನ ಖರ್ಗೆ ಅವರೇ ಮುಖ್ಯಮಂತ್ರಿಯಾಗಲಿ ಎಂದಿದ್ದಾರೆ.


