ದೇಶದ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ಮುಂದಿನ ಒಂದು ವರ್ಷದವರೆಗೆ ಮದುವೆ ಹಾಗೂ ಇತರೆ ಸಮಾರಂಭಗಳಿಗಾಗಿ ಚಿನ್ನ ಖರೀದಿಸುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧ ಪರಿಸ್ಥಿತಿ ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆಯೇ ಪ್ರಧಾನಿ ಈ ಮನವಿ ಮಾಡಿದ್ದು, ದೇಶದ ವಿದೇಶಿ ವಿನಿಮಯ ಸಂಗ್ರಹವನ್ನು ಉಳಿಸುವುದು ಅತ್ಯಂತ ಅಗತ್ಯ ಎಂದು ಹೇಳಿದ್ದಾರೆ.ಪ್ರಧಾನಿಯವರ ಈ ಹೇಳಿಕೆಯ ಬೆನ್ನಲ್ಲೇ ಚಿನ್ನದ ಮಾರುಕಟ್ಟೆಯಲ್ಲಿ ತಕ್ಷಣದ ಪರಿಣಾಮ ಕಂಡುಬಂದಿದೆ. ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ನಲ್ಲಿ ಜೂನ್ ತಿಂಗಳ ಚಿನ್ನದ ಫ್ಯೂಚರ್ ದರದಲ್ಲಿ ಸುಮಾರು 574 ರೂಪಾಯಿ ಇಳಿಕೆಯಾಗಿದ್ದು, ಪ್ರತಿ 10 ಗ್ರಾಂ ಚಿನ್ನದ ಬೆಲೆ 1,53,669 ರೂಪಾಯಿ ಆಸುಪಾಸಿನಲ್ಲಿ ವಹಿವಾಟಾಗುತ್ತಿದೆ.

ಇತ್ತ ಚಿನ್ನದ ಬೆಲೆ ಇಳಿಕೆಯಾಗಿದ್ದರೂ, ಬೆಳ್ಳಿಯ ದರ ಏರಿಕೆ ಕಂಡಿದೆ. ಜೂನ್ ಫ್ಯೂಚರ್ ಬೆಳ್ಳಿ ದರ ಸುಮಾರು 698 ರೂಪಾಯಿ ಏರಿಕೆಯಾಗಿದ್ದು, ಪ್ರತಿ ಕೆಜಿ ಬೆಳ್ಳಿ 2,65,957 ರೂಪಾಯಿ ಮಟ್ಟದಲ್ಲಿ ವ್ಯವಹಾರ ನಡೆಸುತ್ತಿದೆ. ಮಾರುಕಟ್ಟೆ ಅಂತ್ಯದ ವೇಳೆಗೆ ಬೆಲೆಯಲ್ಲಿ ಮತ್ತಷ್ಟು ಏರಿಳಿತವಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಭಾರತವು ಚಿನ್ನದ ಅಗತ್ಯಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಆಮದಿನ ಮೇಲೆ ಅವಲಂಬಿತವಾಗಿದೆ. ಇದರಿಂದ ದೇಶದ ಅಮೂಲ್ಯ ವಿದೇಶಿ ವಿನಿಮಯ ಸಂಗ್ರಹದ ಮೇಲೆ ಹೆಚ್ಚಿನ ಒತ್ತಡ ಉಂಟಾಗುತ್ತಿದೆ. ಆಮದು ವೆಚ್ಚವನ್ನು ಕಡಿಮೆ ಮಾಡುವ ಮೂಲಕ ರೂಪಾಯಿ ಮೌಲ್ಯವನ್ನು ಸ್ಥಿರವಾಗಿಡುವುದು ಹಾಗೂ ದೇಶದ ಆರ್ಥಿಕತೆಯನ್ನು ಗಟ್ಟಿಗೊಳಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.
ಜಾಗತಿಕ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ದೇಶದ ಆರ್ಥಿಕ ಆತ್ಮನಿರ್ಭರತೆಗೆ ಜನರು ಸಹಕರಿಸಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ. ತಾತ್ಕಾಲಿಕವಾಗಿ ಚಿನ್ನ ಖರೀದಿಯನ್ನು ನಿಯಂತ್ರಿಸುವುದು ದೇಶದ ಆರ್ಥಿಕತೆಗೆ ರಕ್ಷಣಾ ಕವಚವಾಗಲಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.


















