ಮಾ.16 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ : ವಿಶ್ವನಾರಾಯಣಮೂರ್ತಿ

2 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 10 : ಒಳ ಮೀಸಲಾತಿಗೊಳಪಡಿಸದೆ 56,432 ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿರುವುದನ್ನು ವಿರೋಧಿಸಿ
ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಜಂಟಿಯಾಗಿ ಮಾ.16 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ ತಿಳಿಸಿದರು.

ಪ್ರತಿಭಟನೆ ಸಂಬಂಧ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸುಪ್ರೀಂಕೋರ್ಟ್ ಆದೇಶದನ್ವಯ ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಅನುಷ್ಟಾನಗೊಳಿಸಿ ಅದರಂತೆ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸದೆ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿರುವುದನ್ನು ನಾವುಗಳು ಸಹಿಸುವುದಿಲ್ಲ. ಒಳ ಮೀಸಲಾತಿಗಾಗಿಯೇ 35 ವರ್ಷಗಳಿಂದಲೂ ನಡೆಯುತ್ತಿರುವ ಹೋರಾಟಕ್ಕೆ ನ್ಯಾಯ ಸಿಗಬೇಕೆಂಬುದು ನಮ್ಮ ಉದ್ದೇಶ ಎಂದು ವಿಶ್ವನಾರಾಯಣಮೂರ್ತಿ ಹೇಳಿದರು.

 

ಜಸ್ಟಿಸ್ ನಾಗಮೋಹನ್‍ದಾಸ್ ಆಯೋಗ ನೀಡಿರುವ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ಫೆ.26 ರಂದು ರಾಜ್ಯಪಾಲರ ಸಹಿ ಪಡೆದು ಕಾಯಿದೆ ಅನುಮೋದನೆಗೊಂಡಿದ್ದರು. ಒಳ ಮೀಸಲಾತಿ ಅನ್ವಯ ಹುದ್ದೆಗಳನ್ನು ನೇಮಕ ಮಾಡಿಕೊಳ್ಳದೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿರುವುದನ್ನು ಗಮನಿಸಿದರೆ ರಾಜ್ಯ ಸರ್ಕಾರ ಮಾದಿಗರ ವಿರೋಧಿ ಎನ್ನುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಆದ್ದರಿಂದ ಮಾ.16 ರಂದು ರಾಜ್ಯಾದ್ಯಂತ ತಮಟೆ ಚಳುವಳಿ, ಘೇರಾವ್, ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ಕಾವನ್ನು ಹೆಚ್ಚಿಸಲಾಗುವುದು. ಮಾದಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿಶ್ವನಾರಾಯಣಮೂರ್ತಿ ಮನವಿ ಮಾಡಿದರು.

 

ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಾಧ್ಯಕ್ಷ ಜಿ.ಗುರುಮೂರ್ತಿ, ಜಿಲ್ಲಾ ಸಂಚಾಲಕ ಹೆಚ್.ಶಿವಮೂರ್ತಿ ಬಹದ್ದೂರ್‍ಘಟ್ಟ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಚಿಕ್ಕಗೊಂಡನಹಳ್ಳಿ, ಗೌರವಾಧ್ಯಕ್ಷ ಚಂದ್ರಪ್ಪ ಚೇಳುಗುಡ್ಡ ಇನ್ನು ಅನೇಕರು ಸಭೆಯಲ್ಲಿ ಹಾಜರಿದ್ದರು.

ಫೋಟೋ ವಿವರಣೆ : ಒಳ ಮೀಸಲಾತಿಗೆ ವಿರುದ್ದವಾಗಿ ರಾಜ್ಯ ಸರ್ಕಾರ 56,432 ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿರುವುದನ್ನು ಖಂಡಿಸಿ ಮಾ.16 ರಂದು ರಾಜ್ಯಾದ್ಯಂತ ನಡೆಯುವ ಹೋರಾಟ ಕುರಿತು ನಡೆದ ಸಭೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ ಮಾತನಾಡಿದರು.

Share This Article