ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 11 : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಯನ್ನು ಖಂಡಿಸಿ ಸೋಷಲಿಸ್ಟ್ ಯೂನಿಟ್ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ವತಿಯಿಂದ
ಮೇ.14 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರವಿಕುಮಾರ್ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಕ್ಷಣ, ಆರೋಗ್ಯ, ಉದ್ಯೋಗ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿದ್ದು, ಯುವ ಜನಾಂಗಕ್ಕೆ ದ್ರೋಹವೆಸಗುತ್ತಿವೆ. ಪ್ರತಿ ಪ್ರಜೆಯಿಂದಲೂ ತೆರಿಗೆ ವಸೂಲು ಮಾಡುತ್ತಿರುವ ಸರ್ಕಾರಗಳು ಮೂಲಭೂತ ಸೌಲಭ್ಯಗಳನ್ನು ನೀಡಬೇಕೆಂಬುದನ್ನು ಮರೆತಂತಿದೆ. ಪ್ರಧಾನಿ ಮೋದಿರವರ ಅಚ್ಚೆದಿನ್ಗಳಿಂದ ಯಾವುದೇ ಪ್ರಯೋಜನವಿಲ್ಲ. ರೈತರು, ಕಾರ್ಮಿಕರು, ಯುವಕ-ಯುವತಿಯರು, ವಿದ್ಯಾರ್ಥಿಗಳು, ಜನಸಾಮಾನ್ಯರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವಿಸಲು ಆಗದೆ ಕಷ್ಟ ಪಡುವಂತಾಗಿದೆ. ಹಾಗಾಗಿ ಆಳುವ ಸರ್ಕಾರಗಳನ್ನು ಎಚ್ಚರಿಸುವುದಕ್ಕಾಗಿ ನಡೆಯಲಿರುವ ಬೃಹತ್ ಹೋರಾಟದಲ್ಲಿ ಪ್ರತಿ ಜಿಲ್ಲೆಗಳಿಂದಲೂ ಎಸ್.ಯು.ಸಿ.ಐ-ಸಿ. ಪದಾಧಿಕಾರಿಗಳು ಪಾಲ್ಗೊಳ್ಳುತ್ತಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಎಸ್.ಯು.ಸಿ.ಐ-ಸಿ. ರಾಜ್ಯ ಸಮಿತಿಯ ಎಂ.ಎನ್.ಮಂಜುಳ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದ್ದು, ಬೆಲೆ ಏರಿಕೆಯೇ ಸಾಧನೆಯಾಗಿದೆ. ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ದುಬಾರಿಯಾಗಿದೆ. ಉಚಿತ ಗ್ಯಾರೆಂಟಿಗಳಿಗೆ ಹಣ ಹೊಂದಿಸಲು ಆಗದ ರಾಜ್ಯ ಸರ್ಕಾರ ಜನಸಾಮಾನ್ಯರ ಮೇಲೆ ಹೊರೆ ಹೇರುತ್ತಿದೆ. ಪೆಟ್ರೋಲ್ ಬೆಲೆ ಏರಿಕೆಯಿಂದ ಸಾಮಾನ್ಯವಾಗಿ ಬಸ್ ಪ್ರಯಾಣ, ವಾಹನಗಳ ಬಿಡಿ ಭಾಗಗಳ ಬೆಲೆಯೂ ಜಾಸ್ತಿಯಾಗುತ್ತಿದೆ. ಸಚಿವ-ಶಾಸಕರುಗಳ ವೇತನ ಹೆಚ್ಚಳ ಮಾಡಿಕೊಂಡಿರುವ ರಾಜ್ಯ ಸರ್ಕಾರಕ್ಕೆ ಜನಸಾಮಾನ್ಯರ ಕಷ್ಟ ಏನು ಎಂಬುದು ಗೊತ್ತಾಗುತ್ತಿಲ್ಲ. ಅದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಎಚ್ಚರಿಸುವುದಕ್ಕಾಗಿ ಮೇ.14 ರಂದು ಬೆಳಿಗ್ಗೆ 10-30 ಕ್ಕೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜನ ಪಾಲ್ಗೊಳ್ಳಲಿದ್ದಾರೆಂದರು.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಜೀವನ ಭದ್ರತೆಯಿಲ್ಲದೆ ದುಡಿಯುತ್ತಿದ್ದಾರೆ. ಬಾಣಂತಿಯರ ಸಾವು ಜಾಸ್ತಿಯಾಗುತ್ತಿದೆ. ಆರುವರೆ ಸಾವಿರ ಸರ್ಕಾರಿ ಶಾಲೆಗಳು ರಾಜ್ಯದಲ್ಲಿ ಮುಚ್ಚಿರುವುದು ನೋವಿನ ಸಂಗತಿ. ಉದ್ಯಮಿಗಳು, ಬಂಡವಾಳಶಾಹಿಗಳ ಪರವಾಗಿರುವ ಸರ್ಕಾರಗಳಿಂದ ಹಣವಿಲ್ಲದವರು ಬದುಕುವುದು ಕಷ್ಟವಾಗಿದೆ. ಹನ್ನೊಂದಕ್ಕೂ ಹೆಚ್ಚು ಬೇಡಿಕೆಗಳನ್ನಿಟ್ಟುಕೊಂಡು ನಡೆಸುತ್ತಿರುವ ಹೋರಾಟದಲ್ಲಿ ಜಿಲ್ಲೆಯಿಂದ ಹೆಚ್ಚಿನ ಜನ ಭಾಗವಹಿಸುವಂತೆ ಮನವಿ ಮಾಡಿದರು. ಸುಜಾತ, ಕುಮುದ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









