ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಫೆ. 23 ರಂದು ಸಚಿವರ ಕಚೇರಿ ಎದುರು ಬೃಹತ್ ಪ್ರತಿಭಟನೆ

2 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 22 : ಬಜೆಟ್ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಫೆ.23 ರಂದು ಹಿರಿಯೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹುಲ್ಲೂರು ಕುಮಾರಸ್ವಾಮಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿಯನ್ನು ಜಾರಿಗೊಳಿಸಲು ನ್ಯಾಯಮೂರ್ತಿ
ಹೆಚ್.ಎನ್.ನಾಗಮೋಹನ್‍ದಾಸ್ ಆಯೋಗದ ಶಿಫಾರಸ್ಸಿನಂತೆ ಜಾರಿಗೊಳಿಸದೆ ರಾಜ್ಯ ಸರ್ಕಾರ ಕೆಲವು ಮಾರ್ಪಾಡುಗಳೊಂದಿಗೆ ಒಳ ಮೀಸಲಾತಿಯನ್ನು ಜಾರಿಗೊಳಿಸಿ ಗೊಂದಲಕ್ಕೀಡು ಮಾಡಿದೆ. ಮುಂದಿನ ಬಜೆಟ್ ಅಧಿವೇಶನದಲ್ಲಿ ಎಲ್ಲಾ ಗೊಂದಲಗಳನ್ನು ನಿವಾರಿಸಿ ಒಳ ಮೀಸಲಾತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.

 

ನೇರ ನೇಮಕಾತಿ ಜೊತೆಗೆ ಪದೋನ್ನತಿಯಲ್ಲೂ ಹಾಗೂ ಬ್ಯಾಕ್‍ಲಾಗ್, ಕೆಐಎಡಿಬಿ. ಬಿಡಿಎ. ಸರ್ಕಾರಿ ಗುತ್ತಿಗೆ ಸೇರಿದಂತೆ ಎಲ್ಲಾ ರಂಗಗಳಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. ಎಸ್ಸಿಪಿ. ಟಿಎಸ್ಪಿ. ಅನುದಾನದಲ್ಲಿಯೂ ಸಹ 6:6:5 ರ ಅನುಪಾತದಲ್ಲಿ ಹಂಚಿಕೆಯಾಗಬೇಕು. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ. ಒಂದರಷ್ಟು ಮೀಸಲಾತಿಯೊಂದಿಗೆ ಪ್ರತ್ಯೇಕ ನಿಗಮ ಹಾಗೂ ಪ್ಯಾಕೇಜ್ ಘೋಷಿಸಬೇಕು. ಶಾಶ್ವತ ಆಯೋಗ ನೇಮಕ ಹಾಗೂ ಮೀಸಲಾತಿ ಹೆಚ್ಚಳಕ್ಕೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಒಳ ಮೀಸಲಾತಿ ಹೋರಾಟಗಾರರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು. ಆದಿಜಾಂಬವ ಅಭಿವೃದ್ದಿ ನಿಗಮ, ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ, ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮಗಳಿಗೆ ತಲಾ 2 ಸಾವಿರ ಕೋಟಿ ರೂ. ಅನುದಾನ ನೀಡಬೇಕು. ರಾಜ್ಯ ಸರ್ಕಾರವು ಕೇಂದ್ರಕ್ಕೆ ಶೇ.17 ರಷ್ಟು ಮೀಸಲಾತಿಯನ್ನು ಸಂವಿಧಾನದ 9 ನೇ ಷೆಡ್ಯೂಲ್‍ಗೆ ಸೇರಿಸಲು ಪ್ರಸ್ತಾವ ಸಲ್ಲಿಸಿದ್ದರೂ ಬಿಜೆಪಿ. ನೇತೃತ್ವದ ಸರ್ಕಾರ ಸೇರಿಸದೆ ದ್ರೋಹವೆಸಗುತ್ತಿರುವುದನ್ನು ವಿರೋಧಿಸಿ ಸಚಿವರ ಕಚೇರಿ ಎದುರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ದಲಿತರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗು ಎಲ್ಲಾ ಪಕ್ಷಗಳ ಮುಖಂಡರುಗಳು ಪಾಲ್ಗೊಳ್ಳುವಂತೆ ಹುಲ್ಲೂರು ಕುಮಾರಸ್ವಾಮಿ ಮನವಿ ಮಾಡಿದರು.
ವೈ.ರಾಜಣ್ಣ ತುರುವನೂರು, ರಮೇಶ್, ಶಿವರಾಜ್, ಟಿ.ರವಿ, ಯೋಗರಾಜ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Share This Article
Enable Notifications OK No thanks