ತರೀಕೆರೆ: ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಸಂದರ್ಭದಲ್ಲಿ ಉಂಟಾಗಿದ್ದ ಸಮಸ್ಯೆ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಇಂದು ತರೀಕೆರೆಗೆ ಭೇಟಿ ನೀಡಿ, ತರೀಕೆರೆ ಶಾಸಕರಾದ ಜಿ.ಹೆಚ್. ಶ್ರೀನಿವಾಸ್, ಮುಖ್ಯ ಇಂಜಿನಿಯರ್ ರವಿಶಂಕರ್, ಅಧೀಕ್ಷಕ ಇಂಜಿನಿಯರ್ ಕವಿತಾ ಹಾಗೂ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಮೇಂದ್ರ ಅವರೊಂದಿಗೆ ಚರ್ಚೆ ನಡೆಸಿದರು.
ನಂತರ ಸ್ಥಳದಲ್ಲಿಯೇ ರೈತರೊಂದಿಗೆ ಸಂವಾದ ನಡೆಸಿದ ಸಚಿವರು, ರೈತರ ಅಹವಾಲುಗಳು ಹಾಗೂ ನೀರಾವರಿ ಸಮಸ್ಯೆಗಳನ್ನು ಆಲಿಸಿದರು. ಕಾಲುವೆಯಲ್ಲಿ ಮಣ್ಣು ತುಂಬಿರುವುದು, ಏತ ನೀರಾವರಿ ವ್ಯವಸ್ಥೆ, ಪಂಪ್ಗಳ ಕಾರ್ಯಾಚರಣೆ ಸೇರಿದಂತೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.

ರೈತರ ಹಿತಾಸಕ್ತಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಂಡು, ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ನಿರಂತರವಾಗಿ ಹರಿಯುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ರೈತರಿಗೆ ಭರವಸೆ ನೀಡಿದರು.
ರೈತರೊಂದಿಗೆ ಸೌಹಾರ್ದಯುತವಾಗಿ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಂಡ ಬಳಿಕ, ಬೆಟ್ಟದ ತಾವರೆಕೆರೆ ಬಳಿಯ ಮತ್ತೊಂದು ಪಂಪ್ನಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ಹರಿಸುವ ಕಾರ್ಯಕ್ಕೆ ಸಚಿವ ಟಿ. ರಘುಮೂರ್ತಿ ಅವರು ಪುನರ್ ಚಾಲನೆ ನೀಡಿದರು.
ಸ್ಥಗಿತಗೊಂಡಿದ್ದ ನೀರು ಹರಿಸುವ ಪ್ರಕ್ರಿಯೆ ಮತ್ತೆ ಆರಂಭಗೊಂಡಿರುವುದು ತರೀಕೆರೆ ಹಾಗೂ ಚಿತ್ರದುರ್ಗ ಭಾಗದ ರೈತರಲ್ಲಿ ಸಂತಸ ಮತ್ತು ಆಶಾಭಾವನೆ ಮೂಡಿಸಿದೆ.
ಈ ಸಂದರ್ಭದಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.











