ಧಾರವಾಡ: ಉತ್ತರ ಕರ್ನಾಟಕದ ಜನಪ್ರಿಯ ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದ್ದಾರೆ. ಆದರೆ ಈ ಬಾರಿ ಯಾವುದೇ ವಿವಾದದಿಂದಲ್ಲ, ಪತ್ನಿಯ ಸೀಮಂತ ಕಾರ್ಯಕ್ರಮವನ್ನು ಹಿಂದೂ ಸಂಪ್ರದಾಯದಂತೆ ನೆರವೇರಿಸುವ ಮೂಲಕ ಅವರು ಗಮನ ಸೆಳೆದಿದ್ದಾರೆ.ಧಾರವಾಡ ಮೂಲದ ಮುಕಳೆಪ್ಪ, ‘ಮುಕಳೆಪ್ಪ ರಿಯಲ್ ಟೀಮ್’ ಹಾಗೂ ‘ಶಂಕರಪ್ಪ ಕಾಮಿಡಿ’ ಯೂಟ್ಯೂಬ್ ಚಾನೆಲ್ಗಳ ಮೂಲಕ ಉತ್ತರ ಕರ್ನಾಟಕದ ಗ್ರಾಮೀಣ ಸೊಗಡಿನ ಹಾಸ್ಯ ವಿಡಿಯೊಗಳನ್ನು ನೀಡುತ್ತಾ ಅಪಾರ ಜನಪ್ರಿಯತೆ ಗಳಿಸಿದ್ದಾರೆ.
ಕಳೆದ ವರ್ಷದ ಸೆಪ್ಟೆಂಬರ್ನಲ್ಲಿ ಅವರು ಗಾಯತ್ರಿ ಜಾಲಿಹಾಳ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ಈ ಮದುವೆ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಮದುವೆಗೆ ಸಂಬಂಧಿಸಿದಂತೆ ಯುವತಿಯ ಕುಟುಂಬ ಹಾಗೂ ಕೆಲವು ಸಂಘಟನೆಗಳು ಗಂಭೀರ ಆರೋಪಗಳನ್ನು ಮಾಡಿದ್ದು, ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.

ಪ್ರಸ್ತುತ ಈ ದಂಪತಿ ತಮ್ಮ ವೈವಾಹಿಕ ಜೀವನವನ್ನು ಸಾಗಿಸುತ್ತಿದ್ದು, ಗಾಯತ್ರಿ ಅವರು ಗರ್ಭಿಣಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಅವರ ಸೀಮಂತ ಕಾರ್ಯಕ್ರಮವನ್ನು ಹಿಂದೂ ಸಂಪ್ರದಾಯದಂತೆ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಗಾಯತ್ರಿ ಅವರಿಗೆ ಹಸಿರು ಬಳೆ ತೊಡಿಸಿ, ಆರತಿ ಎತ್ತಿ, ಉಡಿ ತುಂಬುವ ಸೇರಿದಂತೆ ಸಂಪ್ರದಾಯಬದ್ಧ ವಿಧಿವಿಧಾನಗಳನ್ನು ನೆರವೇರಿಸಲಾಯಿತು.ಈ ಸಂಭ್ರಮದ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆಯುತ್ತಿವೆ. ಹಲವರು ದಂಪತಿಯ ಪರಸ್ಪರ ಗೌರವ ಮತ್ತು ಸಂಪ್ರದಾಯಕ್ಕೆ ನೀಡಿರುವ ಮನ್ನಣೆಯನ್ನು ಶ್ಲಾಘಿಸುತ್ತಿದ್ದರೆ, ಕೆಲವರು ತಮ್ಮದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹಿಂದೆ ವಿವಾದಗಳಿಂದ ಸುದ್ದಿಯಾಗಿದ್ದ ಮುಕಳೆಪ್ಪ, ಈ ಬಾರಿ ಪತ್ನಿಯ ಸಂಪ್ರದಾಯಕ್ಕೆ ಗೌರವ ಸಲ್ಲಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವಾಗಿದ್ದಾರೆ.











