ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 14 : ಹನ್ನೆರಡನೆ ವಾರ್ಡ್ ಎ.ಕೆ.ಕಾಲೋನಿಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್ ಬಡ ಹೆಣ್ಣು ಮಕ್ಕಳಿಗೆ ಸೀರೆಗಳನ್ನು ವಿತರಿಸಿದರು.
ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಸೀರೆಗಳನ್ನು ವಿತರಿಸಿ ಮಾತನಾಡಿದ ಮುನಿರಾ ಎ.ಮಕಾಂದಾರ್ ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಶೋಷಿತರು, ಬಡವರು, ದಲಿತರು, ಅಲ್ಪಸಂಖ್ಯಾತರ ಪರವಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ಉಚಿತ ಗ್ಯಾರೆಂಟಿಗಳನ್ನು ಜಾರಿಗೊಳಿಸಿ ಮೂರು ವರ್ಷಗಳ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಹಿಂದೂ-ಮುಸಲ್ಮಾನರು ಒಟ್ಟಿಗೆ ಯುಗಾದಿ ಹಾಗೂ ರಂಜಾನ್ ಹಬ್ಬವನ್ನು ಸಹೋದರತ್ವ, ಸಹಬಾಳ್ವೆಯಿಂದ ಆಚರಿಸುವಂತೆ ಶುಭ ಹಾರೈಸಿದರು.
ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಇವರುಗಳು ಈ ಸಂದರ್ಭದಲ್ಲಿದ್ದರು.






