Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜಕೀಯದಲ್ಲಿ ಮುಸ್ಲಿಂ ಸಮಾಜಕ್ಕೆ ಅಧಿಕಾರವಿಲ್ಲ, ಆದ್ಯತೆಯಿಲ್ಲ, ಮುಸ್ಲಿಮರು ಕೇವಲ ಮತ ನೀಡುವುದಕ್ಕಷ್ಟೆ ಸೀಮಿತ : ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಶಿಕ್ಷಣದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿರುವವರನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆಯಾಗುತ್ತದೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಹೇಳಿದರು.


ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ವತಿಯಿಂದ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಮುಸ್ಲಿಂ ವಿದ್ಯಾರ್ಥಿಗಳಿಗೆ ತ.ರಾ.ಸು.ರಂಗಮಂದಿರದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.

ನಾಲ್ಕೈದು ವರ್ಷಗಳ ಹಿಂದೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಸಮಸ್ಯೆ ಎದುರಿಸಿ ಅದರ ನಡುವೆಯೇ ಹತ್ತನೆ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿರುವುದು ಕಮ್ಮಿ ಸಾಧನೆಯಲ್ಲ. ಪ್ರತಿಭಾವಂತ ಮಕ್ಕಳ ಹಿಂದೆ ಸಮಾಜದ ಮುಖಂಡರುಗಳು ಇದ್ದಾರೆನ್ನುವುದಕ್ಕೆ ಪ್ರತಿಭಾ ಪುರಸ್ಕಾರ ಮಾಡುತ್ತಿರುವುದೇ ಸಾಕ್ಷಿ ಎಂದು ತಿಳಿಸಿದರು.

ಮುಸ್ಲಿಂ ಸಮಾಜದ ಹೆಣ್ಣು ಮಕ್ಕಳ ಶಿಕ್ಷಣಕ್ಕೂ ಸಮಾನ ಅವಕಾಶವಿದೆ. ತಂದೆ-ತಾಯಿಗಳು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವುದರ ಜೊತೆಗೆ ಮಕ್ಕಳ ಚಲನವಲನದ ಕಡೆಗೂ ನಿಗಾ ಇಡಬೇಕೆಂದರು.

ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ಮಾತನಾಡಿ ಮಕ್ಕಳಿಗೆ ಹಣ ಆಸ್ತಿ ಸಂಪಾದಿಸುವ ಬದಲು ಶಿಕ್ಷಣವನ್ನೆ ದೊಡ್ಡ ಸಂಪತ್ತನ್ನಾಗಿ ಮಾಡಬೇಕು. ಶಿಕ್ಷಣದ ಕೊರತೆಯಿರುವವರು ಮಾತ್ರ ವಯಸ್ಸಾದ ತಂದೆ-ತಾಯಿಗಳನ್ನು ಮನೆಯಿಂದ ಹೊರ ಹಾಕುತ್ತಾರೆ. ಮುಸ್ಲಿಂ ಹೆಣ್ಣು ಮಕ್ಕಳಿಗೂ ಪುರುಷರಂತೆ ಸಮಾನವಾಗಿ ಶಿಕ್ಷಣ ಕೊಡಿಸಬೇಕೆಂದು ಕುರಾನ್‍ನಲ್ಲಿ ಹೇಳಿದೆ. ಮಕ್ಕಳು ಚೆನ್ನಾಗಿ ಓದಿ ಜೀವನದಲ್ಲಿ ದೊಡ್ಡ ಹುದ್ದೆಯನ್ನು ಏರಲಿ ಎನ್ನುವ ಆಸೆ ಪೋಷಕರಿಗೂ ಇರಬೇಕು. ಮಕ್ಕಳು ಹೆಚ್ಚಿನ ಅಂಕಗಳನ್ನು ಪಡೆದು ಗುರು-ಹಿರಿಯರು ಅಪ್ಪ-ಅಮ್ಮನಿಗೆ ಕೀರ್ತಿ ತಂದರೆ ಅದಕ್ಕಿಂತ ದೊಡ್ಡ ಸಂತೋಷ ಮತ್ತೊಂದಿಲ್ಲ.

ರಾಜಕೀಯದಲ್ಲಿ ಮುಸ್ಲಿಂ ಸಮಾಜಕ್ಕೆ ಆದ್ಯತೆಯಿಲ್ಲ. ನಮ್ಮ ಸಮಾಜ ಇಲ್ಲಿಯವರೆಗೂ ಕೇವಲ ಮತ ನೀಡುವುದಕ್ಕಷ್ಟೆ ಸೀಮಿತವಾಗಿದೆ. ಆದರೆ ರಾಜಕೀಯವಾಗಿ ಅಧಿಕಾರ ಪಡೆಯಲು ಆಗುತ್ತಿಲ್ಲ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್‍ರವರನ್ನು ಎಂ.ಎಲ್.ಸಿ.ಯನ್ನಾಗಿಯಾದರೂ ನೇಮಕ ಮಾಡಲಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬಿ.ಕೆ.ರಹಮತ್‍ವುಲ್ಲಾ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ ಮಾತನಾಡಿ ನಮ್ಮ ಕಾಲದಲ್ಲಿ ಶಿಕ್ಷಣವಂತರಾಗಬೇಕಾದರೆ ಅಷ್ಟೊಂದು ಸೌಲಭ್ಯವಿರಲಿಲ್ಲ. ಈಗ ಅಲ್ಪಸಂಖ್ಯಾತರ ಇಲಾಖೆಯಿಂದ ಸಾಕಷ್ಟು ಸೌಕರ್ಯಗಳಿವೆ. ಎಲ್ಲವನ್ನು ಬಳಸಿಕೊಂಡು ಶಿಕ್ಷಣವಂತರಾಗುವ ಮೂಲಕ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಜೀವನದಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.

ವೈದ್ಯರು, ಇಂಜಿನಿಯರ್, ಐ.ಎ.ಎಸ್. ಐ.ಪಿ.ಎಸ್. ಅಧಿಕಾರಿಗಳು ಆಗಬಹುದು. ಅದಕ್ಕೆ ಕಠಿಣ ಪರಿಶ್ರಮ ಬೇಕು. ಸರ್ಕಾರದಲ್ಲಿ ಅನೇಕ ಸೌಲಭ್ಯಗಳಿವೆ. ಪ್ರಯೋಜನ ಪಡೆದುಕೊಂಡು ವಿದ್ಯಾವಂತರಾಗುವ ಮೂಲಕ ಗುರು-ಹಿರಿಯರು, ತಂದೆ-ತಾಯಿಗಳಿಗೆ ಗೌರವ ತರಬೇಕೆಂದು ಹೇಳಿದರು.

ಧಾರ್ಮಿಕ ಚಿಂತಕ ಮೌಲಾನಾ ಎಜಾಜುಲ್ಲಾ ಸಾನಿಧ್ಯ ವಹಿಸಿದ್ದರು.  ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಎಂ.ಹನೀಫ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ಕಾರ್ಯಾಧ್ಯಕ್ಷ ನವೀದ್ ಅಬ್ದುಲ್ಲಾ, ನ್ಯಾಯವಾದಿ ದಿಲ್‍ಶಾದ್ ಉನ್ನಿಸ, ಮುಸ್ಲಿಂ ವಕೀಲರ ಸಂಘದ ಅಧ್ಯಕ್ಷ ಸಮೀವುಲ್ಲಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಸಾಧಿಕ್‍ವುಲ್ಲಾ, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಸೈಯದ್ ವಲಿಖಾದ್ರಿ ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment