Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 09 ರಿಂದ 24 ರವರೆಗೆ ನಾಯಕನಹಟ್ಟಿ ಜಾತ್ರೆ : ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಜಿಲ್ಲಾಧಿಕಾರಿ ಸೂಚನೆ

---Advertisement---

 

ಚಿತ್ರದುರ್ಗ.ಮಾ.03 : ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಗೆ ವಿವಿಧೆಡೆಗಳಿಂದ 3 ರಿಂದ 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದ್ದು, ಬಿಸಿಲು ಹೆಚ್ಚಿರುವ ಕಾರಣ ಎಚ್ಚರಿಕೆ ವಹಿಸಿ ಭಕ್ತಾಧಿಕಾಗಳಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ ದೇವಸ್ಥಾನದ 2025ನೇ ಸಾಲಿನ ಜಾತ್ರೆಯ ಕೆಲಸ ಕಾರ್ಯಗಳನ್ನು ಪರಿಶೀಲಿಸಲು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಕ್ಷೇತ್ರದಲ್ಲಿ ಇದೇ ಮಾರ್ಚ್ 09 ರಿಂದ 24 ರವರೆಗೆ ಜಾತ್ರೆ ನಡೆಯಲಿದ್ದು, ಮಾರ್ಚ್ 16ರಂದು ದೊಡ್ಡ ರಥೋತ್ಸವ ನಡೆಯಲಿದೆ. ಜಾತ್ರೆಯಲ್ಲಿ ಕುಡಿಯುವ ನೀರು ವ್ಯವಸ್ಥೆಗೆ ವಿ.ವಿ.ಸಾಗರದ ನೀರು ಹಾಗೂ ಹೆಚ್ಚುವರಿಯಾಗಿ ಟ್ಯಾಂಕರ್‍ಗಳ ಮೂಲಕ ನೀರು ಹಾಗೂ ದಾನಿಗಳ ಬೋರ್‍ವೆಲ್‍ಗಳಿಂದ ನೀರನ್ನು ಪಡೆಯಲು ಅಧಿಕಾರಿಗಳ ತಂಡ ರಚಿಸಿಕೊಂಡು, ನೀರು ವಿತರಿಸುವ ಕಾರ್ಯ ಆಗಬೇಕು.  ಸಹಾಯವಾಣಿ ಕೌಂಟರ್ ತೆರೆದು ಭಕ್ತರಿಗೆ ಸಮರ್ಪಕವಾಗಿ ನೀರಿನ ವ್ಯವಸ್ಥೆ ಮಾಡಲು ಚಳ್ಳಕೆರೆ ತಹಶೀಲ್ದಾರ್ ಹಾಗೂ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ನಾಯಕನಹಟ್ಟಿ ಪಟ್ಟಣಕ್ಕೆ ಕೇವಲ ಜಾತ್ರೆಯ ಸಮಯದಲ್ಲಿ ಮಾತ್ರವಲ್ಲದೇ ಪ್ರತಿನಿತ್ಯವೂ ಸಮರ್ಪಕವಾಗಿ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಬೇಕು. ಬೇಸಿಗೆ ಪ್ರಾರಂಭವಾಗುವ ಮೊದಲೇ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಅಗತ್ಯ ಕ್ರಿಯಾಯೋಜನೆ ತಯಾರಿಸಿಕೊಳ್ಳಬೇಕು ಎಂದು ತಿಳಿಸಿದ ಅವರು, ನಾಯಕನಹಟ್ಟಿ ಪಟ್ಟಣಕ್ಕೆ ನಿತ್ಯವೂ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಅವರಿಗೆ ಸೂಚಿಸಿದರು.
ದೊಡ್ಡ ರಥೋತ್ಸವದ ಸಂದರ್ಭದಲ್ಲಿ ರಥ ಸಾಗಲು ಯಾವುದೇ ಅಡಚಣೆಯಾಗದಂತೆ ಕ್ರಮವಹಿಸಬೇಕು. ಈ ಹಿನ್ನಲೆಯಲ್ಲಿ ತೇರು ಬೀದಿಯಲ್ಲಿ ರಸ್ತೆಗೆ ಅಡ್ಡಿಯಾಗುವಂತೆ ಯಾವುದೇ ಅಂಗಡಿಗಳನ್ನು ಹಾಕಿಕೊಳ್ಳಲು ಅವಕಾಶ ನೀಡಬಾರದು. ರಥಬೀದಿಯ ಡಾಂಬರೀಕರಣ ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನಾಯಕನಹಟ್ಟಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ದುರಸ್ಥಿಗೊಳಿಸಿ, ರಸ್ತೆ ಬದಿಗಳ ಜಂಗಲ್ ಕಟಿಂಗ್ ಕಾರ್ಯ ನಿರ್ವಹಿಸಿ ವಾಹನ ಮತ್ತು ಜನರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

 

ಕೆರೆ ಏರಿಗೆ ಬ್ಯಾರಿಕೇಡ್ ವ್ಯವಸ್ಥೆ ಮಾಡಿ: ಈ ಬಾರಿ ಸಣ್ಣಕೆರೆ ಹಾಗೂ ದೊಡ್ಡ ಕೆರೆ ತುಂಬಿರುವುದರಿಂದ ಯಾವುದೇ ಕಾರಣಕ್ಕೂ ಭಕ್ತಾಧಿಗಳು ಕೆರೆ ಒಳಗೆ ಇಳಿಯದಂತೆ ಸೂಕ್ತ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಣ್ಣಕೆರೆ ಮತ್ತು ದೊಡ್ಡಕೆರೆ ಹತ್ತಿರು ಭಕ್ತರು ಈಜಾಡುವ ಸಂಭವವಿರುವುದರಿಂದ ಅವಘಡ ತಡೆಯಲು ಮುಂಜಾಗ್ರತಾ ಕ್ರಮವಾಗಿ ಎಸ್‍ಡಿಆರ್‍ಎಫ್ ತಂಡ ನಿಯೋಜನೆಗೆ ಪತ್ರ ಬರೆದು, ಕೆರೆ ರೆಸ್ಕ್ಯೂ ಬೋಟ್, ಲೈಫ್ ಜಾಕೆಟ್ ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಅಗ್ನಿಶಾಮಕ ವಾಹನಗಳ ಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿಗೆ ತಾಕೀತು ಮಾಡಿದರು.

ಶಾಶ್ವತವಾಗಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮವಹಿಸಿ:
ನಾಯಕನಹಟ್ಟಿ ಪಟ್ಟಣದಲ್ಲಿ ಅಗತ್ಯ ಇರುವ ಕಡೆ ಶಾಶ್ವತವಾಗಿ ಸಿ.ಸಿ.ಕ್ಯಾಮೆರಾ ಅಳವಡಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.  ಜಾತ್ರೆಯಲ್ಲಿ ಸರಗಳ್ಳತನ ಸಾಮಾನ್ಯವಾಗಿದ್ದು, ಈ ನಿಟ್ಟಿನಲ್ಲಿ ಶಾಶ್ವತವಾಗಿ ಸಿ.ಸಿ.ಕ್ಯಾಮೆರಾ ಅಳವಡಿಸಿಕೊಳ್ಳಬೇಕು ಎಂದು ದೇವಸ್ಥಾನ ಸಮಿತಿ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.

ನೀರಿನ ಮೂಲಗಳ ಸ್ಯಾಂಪಲ್‍ಗಳನ್ನು ಪರೀಕ್ಷೆಗೊಳಪಡಿಸಿ, ವರದಿ ಪಡೆದುಕೊಳ್ಳಬೇಕು. ಸಮರ್ಪಕವಾಗಿ ಅಗತ್ಯವಿರುವ ಔಷಧಿಗಳನ್ನು ಪೂರೈಕೆ ಮಾಡಬೇಕು. ಬೇಸಿಗೆ ಇರುವುದರಿಂದ ಹೆಚ್ಚು ಒಆರ್‍ಎಸ್ ಪೂರೈಕೆ ಮಾಡಬೇಕು. ಜಾತ್ರೆಯಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ನಾಯಕನಹಟ್ಟಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಲಾಗಿದ್ದು, ಅಗತ್ಯವಿರುವ ಕಡೆ ಚೆಕ್‍ಪೋಸ್ಟ್ ನಿರ್ಮಿಸಿ, ಪ್ರಾಣಿ ಬಲಿ ನಿಷೇಧ ಕುರಿತು ಜಾಗೃತಿ ಮೂಡಿಸಬೇಕು ಎಂದು ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಕುಮಾರ್ ಅವರಿಗೆ ತಿಳಿಸಿದರು.
ರಕ್ಷಣೆ ಹಾಗೂ ಬಂದೋಬಸ್ತ್ ಗೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮವಹಿಸಬೇಕು. ಜಾತ್ರಾ ಸಂದರ್ಭದಲ್ಲಿ ಬ್ಯಾರಿಕೇಡ್ ಮತ್ತು ಸಲಹಾ ಕೌಂಟರ್‍ಗಳನ್ನು ಅಗತ್ಯ ಇರುವ ಕಡೆ ವಾಚ್ ಟವರ್‍ಗಳ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು.  ಪಟ್ಟಣಕ್ಕೆ ಪ್ರವೇಶ ಕಲ್ಪಿಸುವ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಬಾರದು, ಹಾಗೂ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಿ, ಮೊದಲೇ ಸಿದ್ಧಪಡಿಸಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಕೆಎಸ್‍ಆರ್‍ಟಿಸಿ ವಿಭಾಗೀಯ ಅಧಿಕಾರಿ ಶ್ರೀನಿವಾಸ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment