ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ, ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ವ್ಯಕ್ತಿಗಳಿಂದ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.ಯೋಗೀಶ್ ಗೌಡ ಅವರ ಪತ್ನಿ ಮಲ್ಲಮ್ಮ ಮಾತನಾಡಿ, ನ್ಯಾಯಾಲಯದ ತೀರ್ಪಿನಿಂದ ತಮಗೆ ಸಂತೋಷವೂ ಇಲ್ಲ, ದುಃಖವೂ ಇಲ್ಲ ಎಂದು ಹೇಳಿದರು. ಸದ್ಯ ತಮ್ಮ ಮಕ್ಕಳ ಶಿಕ್ಷಣ ಮತ್ತು ಭವಿಷ್ಯದತ್ತವೇ ಗಮನ ಹರಿಸುತ್ತಿರುವುದಾಗಿ ತಿಳಿಸಿದ ಅವರು, ನ್ಯಾಯಾಲಯದ ತೀರ್ಪೇ ಅಂತಿಮ ಎಂದು ಹೇಳಿದ್ದಾರೆ.
“ನ್ಯಾಯಾಲಯ ಯಾವ ತೀರ್ಪು ನೀಡುತ್ತದೆ ಎಂಬುದು ಯಾರಿಗೂ ಮುಂಚಿತವಾಗಿ ಗೊತ್ತಾಗುವುದಿಲ್ಲ. ಕೋರ್ಟ್ ನೀಡಿರುವ ತೀರ್ಪಿನಿಂದ ನಮಗೆ ಯಾವುದೇ ಹಿನ್ನಡೆಯಾಗಿದೆ ಎಂದು ನಾನು ಭಾವಿಸುವುದಿಲ್ಲ. ನಾನು ಇನ್ನು ಮುಂದೆ ಯಾವುದೇ ಕಾನೂನು ಹೋರಾಟ ನಡೆಸುವುದಿಲ್ಲ. ಸುಪ್ರೀಂ ಕೋರ್ಟ್ಗೂ ಹೋಗುವುದಿಲ್ಲ. ನನಗೆ ನನ್ನ ಮಕ್ಕಳ ಭವಿಷ್ಯವೇ ಮುಖ್ಯ,” ಎಂದು ಮಲ್ಲಮ್ಮ ಸ್ಪಷ್ಟಪಡಿಸಿದರು.
ಇನ್ನೊಂದೆಡೆ, ಹೋರಾಟಗಾರ ಬಸವರಾಜ್ ಕೊರವರ ಪ್ರತಿಕ್ರಿಯಿಸಿ, ಜಾಮೀನು ಮಂಜೂರಾದ ಮಾತ್ರಕ್ಕೆ ಪ್ರಕರಣ ಅಂತ್ಯಗೊಂಡಿಲ್ಲ ಎಂದು ಹೇಳಿದರು. “ಯೋಗೀಶ್ ಗೌಡ ಕುಟುಂಬಕ್ಕೆ ನ್ಯಾಯ ದೊರಕಿಸುವ ಹೋರಾಟವನ್ನು ನಾವು ಮುಂದುವರಿಸುತ್ತೇವೆ,” ಎಂದು ಅವರು ತಿಳಿಸಿದರು.
ಬಿಜೆಪಿ ಮುಖಂಡ ಗುರುನಾಥಗೌಡ ಗೌಡರ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿ, “ವಿನಯ್ ಕುಲಕರ್ಣಿ ವಿರುದ್ಧದ ನಮ್ಮ ಕಾನೂನು ಹೋರಾಟ ಮುಂದುವರಿಯಲಿದೆ. ಯೋಗೀಶ್ ಗೌಡ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾವು ಹಿಂದೆ ಸರಿಯುವುದಿಲ್ಲ,” ಎಂದರು.
ಇದಕ್ಕೆ ವಿರುದ್ಧವಾಗಿ, ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದರು. “ಸತ್ಯಕ್ಕೆ ಅಂತಿಮವಾಗಿ ಜಯ ಸಿಗುತ್ತದೆ ಎಂಬ ನಮ್ಮ ನಂಬಿಕೆ ಮತ್ತಷ್ಟು ಬಲಗೊಂಡಿದೆ. ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ. ಅಂತಿಮವಾಗಿ ವಿನಯ್ ಅವರು ಸಂಪೂರ್ಣ ನಿರ್ದೋಷಿಯಾಗಿ ಹೊರಬರುತ್ತಾರೆ ಎಂಬ ವಿಶ್ವಾಸವಿದೆ,” ಎಂದು ಹೇಳಿದರು.
ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿ ಕುಲಕರ್ಣಿ ಕೂಡ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, “ನ್ಯಾಯಾಲಯ ನ್ಯಾಯವನ್ನು ಎತ್ತಿ ಹಿಡಿದಿದೆ. ಆದರೆ ನಮ್ಮ ಕುಟುಂಬದ ಅಭಿಮಾನಿಗಳು ಯಾವುದೇ ರೀತಿಯ ಸಂಭ್ರಮಾಚರಣೆ ಮಾಡಬಾರದು. ಎಲ್ಲರೂ ಶಾಂತಿ ಮತ್ತು ಸಂಯಮದಿಂದ ವರ್ತಿಸಬೇಕು,” ಎಂದು ಮನವಿ ಮಾಡಿದರು.









