ಸುದ್ದಿಒನ್, ಹಿರಿಯೂರು, ಜುಲೈ. 28 : ಆಗಸ್ಟ್ 3ರಂದು ಜನರೊಂದಿಗೆ ಜೆಡಿಎಸ್ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಾಲೂಕಿನ ಹರಿಯಬ್ಬೆ ಗ್ರಾಮಕ್ಕೆ ಆಗಮಿಸುತ್ತಿದ್ದು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಮನವಿ ಮಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ಅವ್ಯವಹಾರ, ಭ್ರಷ್ಟಾಚಾರ ವಿರುದ್ದ ಹಾಗೂ ಜನತೆಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ಯುವ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವಿಧಾನಸಭಾ ಚುನಾವಣೆ ಅಭ್ಯರ್ಥಿಯಾಗಿದ್ದ ಎಂ. ರವೀಂದ್ರಪ್ಪ ಮಾತನಾಡಿ ಜೆಡಿಎಸ್ ಪಕ್ಷದ ಭರವಸೆ ನಾಯಕ ನಿಖಿಲ್ ಅವರು ರಾಜ್ಯದ ಎಲ್ಲಾ ಭಾಗಗಳಿಗೂ ಸಂಚರಿಸುತ್ತಾ ಸದೃಢ ಪಕ್ಷ ಕಟ್ಟಲು ಶ್ರಮಿಸುತ್ತಾ ಜನತೆಯ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಜತೆಗೆ ಜನವಿರೋಧಿ ಕಾಂಗ್ರೆಸ್ ಸರಕಾರ ಬಿಟ್ಟಿ ಭಾಗ್ಯಗಳ ಮೂಲಕ ಜನತೆಗೆ ವಂಚಿಸುತ್ತಿರುವುದನ್ನು ಮನೆ ಮನೆಗೆ ಮುಟ್ಟಿಸುವ ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬುತ್ತಿದ್ದು, ಕಾರ್ಯಕ್ರಮ ಯಶಸ್ವಿಯಾಗಲು ಜೆಡಿಎಸ್ ಕಾರ್ಯಕರ್ತರು ಅಂದಿನ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಎಂದರು.
ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ ಮಾತನಾಡಿ ಸುಮಾರು 58ದಿನಗಳ ಕಾಲ ನೂರಕ್ಕೂ ಅಧಿಕ ಕ್ಷೇತ್ರದಲ್ಲಿ ಸಂಚರಿಸುತ್ತಾ ಪಕ್ಷ ಸಂಘಟನೆಗೆ ಹೊರಟಿರುವ ನಮ್ಮ ಯುವ ನಾಯಕ ನಿಖಿಲ್ ಅವರು ಈಗಾಗಲೇ 50ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ. ಆ.೩ರಂದು ಬೆಳಿಗ್ಗೆ 11ಗಂಟೆಗೆ ತಾಲೂಕಿನ ಹರಿಯಬ್ಬೆ ಗ್ರಾಮದ ಶಾಲಾವರಣದಲ್ಲಿ ಕಾರ್ಯಕರ್ತರ ಬೃಹತ್ ಸಭೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ನಾಯಕರು ಭಾಗವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ ಯಶೋಧರ, ಮಾಜಿ ತಾಪಂ ಅಧ್ಯಕ್ಷ ಮಂಜುನಾಥ್, ಮುಖಂಡರಾದ ತಿಮ್ಮಣ್ಣ , ತಿಪ್ಪೇಸ್ವಾಮಿ, ರಮೇಶ್, ಶಿವಕುಮಾರ್ ಭಾಗವಹಿಸಿದ್ದರು.










