ಬೆಂಗಳೂರು: ರಾಜ್ಯದಲ್ಲಿ ಸದ್ಯ ಬಿಜೆಪಿ ಜೊತೆಗೆ ಜೆಡುಎಸ್ ಕೈ ಜೋಡಿಸಿದೆ. ಎಲ್ಲಾ ಚುನಾವಣೆಗಳಲ್ಲೂ ಒಟ್ಟೊಟ್ಟಿಗೇನೆ ಸಾಗುತ್ತಾ ಇದ್ದಾರೆ. ಅದೇ ಮೈತ್ರಿ ಸ್ಥಳೀಯ ಚುನಾವಣೆಗಳಲ್ಲಿಯೂ ಮುಂದುವರೆಯುತ್ತಾ ಎಂಬುದು ಹಲವರುಗೆ ಅನುಮಾನ. ಆ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ – ಜೆಡಿಎಸ್ ಮೈತ್ರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇಲ್ಲ. ಹಾಸನದಲ್ಲಿ ಜನವರಿ 23ರಂದು, ಬೆಂಗಳೂರಿನಲ್ಲಿ ಜನವರಿ 18 ರಂದು ಸಭೆ ಮಾಡ್ತಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವೂ ಪ್ರತ್ಯೇಕವಾಗಿ ಹೋರಾಟ ಮಾಡುತ್ತೇವೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಜೊತೆಗೆ ಇರುತ್ತೇವೆ. ವಿಧಾನ ಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಸ್ಥಾನ ಜೆಡಿಎಸ್ ಗೆ ಮೂರು ಸ್ಥಾನ ಬಿಜೆಪಿಗೆ ನೀಡುವ ಬಗ್ಗೆ ಪ್ರಾಥಮಿಕ ಚರ್ಚೆ ಕೂಡ ಆಗಿದೆ ಎಂದಿದ್ದಾರೆ.
ಇದೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಹೇಳಿಕೆಗೂ ತಿರುಗೇಟು ಕೊಟ್ಟಿದ್ದಾರೆ. 130-140 ಸ್ಥಾನಗಳೊಂದಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೆ ಎಂದು ಹೇಳುವ ಮೂಲಕ ವಿಜಯೇಂದ್ರ ಅವರು ಮೈತ್ರಿಯನ್ನ ತಳ್ಳಿ ಹಾಕಿದ್ದರು. ವಿಜಯೇಂದ್ರ ಬಹಳ ಉತ್ಸಾಹದಿಂದ ಓಡಾಡುತ್ತಿದ್ದಾರೆ. ಯಂಗ್ ಸ್ಟಾರ್ ರೀತಿ ಕೆಲಸ ಮಾಡ್ತಿದ್ದಾರೆ. ಸ್ಥಳೀಯ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಮೋದಿ, ಶಾ ಜೊತೆಗೆ ಚರ್ಚೆ ಮಾಡಲು ಆಗಲ್ಲ. ಮೋದಿ, ಶಾ ಜೊತೆಗೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡ್ತೀವಿ ಅಂತೇಳುವ ಮೂಲಕ ಮೈತ್ರಿ ಇದೆ ಎಂದು ಮತ್ತೆ ಪುನರುಚ್ಚರಿಸಿದ್ದಾರೆ.

