ಚಾಮರಾಜನಗರ: ಜಿಲ್ಲೆಯಲ್ಲಿ ಯಾರು ವ್ಯಾಕ್ಸಿನ್ ಪಡೆಯುವುದಿಲ್ಲವೋ ಅವರಿಗೆ ನೋ ಪೆನ್ಶನ್, ನೋ ರೇಷನ್ ಎಂಬ ಕಾರ್ಯಕ್ರಮ ಮಾಡಲಾಗಿದೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೂಲ ಸೌಕರ್ಯ ನೀಡುವುದಿಲ್ಲ ಎಂದು ಹೆದರಿಸುವುದು ಅಕ್ರಮ ಎಂದು ಡಿಸಿ ರವಿ ಅವರ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಡಿ ಕೆ ಶಿವಕುಮಾರ್, ಚಾಮರಾಜನಗರದಲ್ಲಿ ಬಿಜೆಪಿ ಸರ್ಕಾರ ಹೇಳುತ್ತೆ ಕೋವಿಡ್ ಲಸಿಕೆ ಪಡೆಯದಿದ್ರೆ ಪಡಿತರ, ಪಿಂಚಣಿ ಎರಡೂ ಇಲ್ಲ ಅಂತ. ಆದ್ರೆ, ಲಸಿಕೆಗಳು ಜನಸಂಖ್ಯೆಗೆ ಸಾಕಾಗುವಷ್ಟು ಇವೆಯಾ?
ಲಸಿಕೆ ಪಡೆಯುವಂತೆ ಜನರ ಮನವೊಲಿಸಿದ್ದಾರಾ?
ಮೂಲ ಸೌಕರ್ಯಗಳಾದ ಆಹಾರ ಮತ್ತು ಪಿಂಚಣಿ ನೀಡುವುದಿಲ್ಲ ಅಂತ ಹೆದರಿಸುವುದು ಅಕ್ರಮ, ಅನೈತಿಕ ಹಾಗೂ ಅಸಾಂವಿಧಾನಿಕ.
ಬಿಜೆಪಿ ಸರ್ಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತಕ್ಕೆ ನಾಚಿಕೆಯಾಗಬೇಕು. ಆಕ್ಸಿಜನ್ ಪೂರೈಸಲು ಅಸಮರ್ಥರಾಗಿ 36 ಅಮಾಯಕರ ಜೀವ ತೆಗೆದಿದ್ದಾರೆ.
ಲಸಿಕೆ ಪಡೆಯದವರಿಗೆ ಶಿಕ್ಷಿಸಲು ಮುಂದಾಗಿರುವವರು ಮೊದಲು ಆಕ್ಸಿಜನ್, ಲಸಿಕೆ, ಪರೀಕ್ಷೆ ಹಾಗೂ ಮೃತರಿಗೆ ಸೂಕ್ತ ಪರಿಹಾರ ನೀಡದಿದ್ದಕ್ಕೆ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.