ನವೆಂಬರ್ 30 ರಂದು ಅರ್ಥಪೂರ್ಣ ಕನಕ ಜಯಂತಿ : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

2 Min Read

 

ವರದಿ ಮತ್ತು ಫೋಟೋ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ. ನ.20:  ಕನಕ ಜಯಂತಿಯನ್ನು ಇದೇ ನವೆಂಬರ್ 30 ರಂದು ಜಿಲ್ಲಾ ಕೇಂದ್ರದಲ್ಲಿ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕನಕ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನಕ ಜಯಂತಿ ಅಂಗವಾಗಿ ನ. 30 ರಂದು ಬೆಳಿಗ್ಗೆ 10ಕ್ಕೆ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಕನಕದಾಸರ ಭಾವಚಿತ್ರದ ಮೆರವಣಿಗೆ ಪ್ರಾರಂಭವಾಗಿ, ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿವೃತ್ತ, ಎಸ್‍ಬಿಐ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಮದಕರಿ ನಾಯಕರ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಲಿದೆ.
ಅಂದು ಮಧ್ಯಾಹ್ನ 01 ಕ್ಕೆ ನಗರದ ತ.ರಾ.ಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಡೊಳ್ಳು, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ಸರ್ಕಾರದ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಜಯಂತಿಗೆ ಆಹ್ವಾನಿಸಲಾಗುವುದು ಎಂದರು.
ಆಯಿತೋಳು ವಿರೂಪಾಕ್ಷಪ್ಪ ಮತ್ತು ತಂಡದವರಿಂದ ಕನಕದಾಸರ ಕೀರ್ತನೆಗಳ ಗೀತಗಾಯನ ಹಾಗೂ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಸುನಂದಮ್ಮ ಅವರಿಂದ ಕನಕದಾಸರ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು.

ಜಯಂತಿ ಅಂಗವಾಗಿ ಒಂದು ದಿನ ಮುಂಚಿತವಾಗಿ ಕನಕದಾಸರ ಪ್ರತಿಮೆ ಸೇರಿದಂತೆ ನಗರದ ಎಲ್ಲಾ ಪ್ರತಿಮೆ ಹಾಗೂ ವೃತ್ತಗಳಿಗೂ ದೀಪಾಲಂಕಾರ ಹಾಗೂ ಪುಷ್ಪಾಲಂಕಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತದ ವತಿಯಿಂದ ನಡೆಯುವ ಕನಕ ಜಯಂತಿ ಕಾರ್ಯಕ್ರಮಕ್ಕೆ ಸರ್ಕಾರಿ ಅಧಿಕಾರಿಗಳು, ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು. ಜಯಂತಿ ಅಂಗವಾಗಿ ನಗರ ತರಾಸು ರಂಗಮಂದಿದರಲ್ಲಿ ಪುಸ್ತಕ ಮಾರಾಟ ಮಳಿಗೆ ತೆರೆಯಬೇಕು ಎಂದು ಸೂಚನೆ ನೀಡಿದರು.

ಸಮಾಜದ ಬೇಡಿಕೆ ಈಡೇರಿಕೆಗೆ ಮನವಿ:
ಕಳೆದ ಬಾರಿಯ ಕನಕ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ವತಿಯಿಂದ ನಿವೇಶನ, ಭವನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೂ ಬೇಡಿಕೆ ಈಡೇರಿಲ್ಲ ಎಂದು ಸಮಾಜದ ಮುಖಂಡರಾದ ಬಿ.ಟಿ.ಜಗದೀಶ್ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು, ನಿವೇಶನ, ಭವನ ಸೇರಿದಂತೆ ಸಮಾಜದ ಬೇಡಿಕೆಗಳ ಈಡೇರಿಕೆಗೆ ಆದ್ಯತೆ ಮೇರೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ:
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ ಕುರುಬ ಸಮಾಜದ ಐವರಿಗೆ ಹಾಗೂ ಇತರೆ ಐವರಿಗೆ ಸಮಾಜದ ವತಿಯಿಂದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಮಾಜದ ಮುಖಂಡರು ಸಭೆಯಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ನಗರಸಭೆ ಪೌರಾಯುಕ್ತೆ ರೇಣುಕಾ, ಜಿಲ್ಲಾ ಕುರುಬ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀರಾಮ್, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ,  ಸೇರಿದಂತೆ ಸಮಾಜದ ಮುಖಂಡರಾದ ರವಿಶಂಕರ್‍ಬಾಬು, ಕೋಟೆ ಮಂಜಣ್ಣ, ಚಂದ್ರಶೇಖರ್, ಓಂಕಾರಪ್ಪ, ಸುರೇಶ್, ಲೋಕೇಶ್, ಕುಮಾರ್ ಗೌಡ್ರು, ತಿಪ್ಪೇಸ್ವಾಮಿ, ಗುರುಸ್ವಾಮಿ, ಕೃಷ್ಣಮೂರ್ತಿ, ರಜನಿ, ಮುತ್ತುರಾಜ್, ಮಂಜಪ್ಪ, ನಿಶಾನಿ ಜಯಣ್ಣ ಸೇರಿದಂತೆ ಮತ್ತಿತರ ಗಣ್ಯರು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *