ಗುಜರಾತ್ನಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆಗೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಕ್ರಮ ಸಂವಿಧಾನ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.ಈ ಕುರಿತು ಮಾತನಾಡಿದ ಓವೈಸಿ, “ಯುಸಿಸಿ ಹೆಸರಿನಲ್ಲಿ ಮುಸ್ಲಿಮರ ಮೇಲೆ ಹಿಂದೂ ಕಾಯ್ದೆಗಳನ್ನು ಹೇರಲಾಗುತ್ತಿದೆ” ಎಂದು ಆರೋಪಿಸಿದರು. ಮದುವೆ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ವಿಷಯಗಳಲ್ಲಿ ಧರ್ಮಾಧಾರಿತ ವೈಯಕ್ತಿಕ ಕಾನೂನುಗಳು ನಡೆದು ಬರುತ್ತಿದ್ದು, ಅವುಗಳಿಗೆ ಧಕ್ಕೆ ತರುವ ಯಾವುದೇ ಪ್ರಯತ್ನ ಸಂವಿಧಾನದ ವಿರುದ್ಧವಾಗುತ್ತದೆ ಎಂದು ಹೇಳಿದರು.
ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಪ್ರತಿಯೊಂದು ಧರ್ಮಕ್ಕೂ ತಮ್ಮದೇ ಆದ ವೈಯಕ್ತಿಕ ಕಾನೂನುಗಳಿದ್ದು, ಒಂದೇ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಅವರು ವಾದಿಸಿದರು. ಯುಸಿಸಿ ಮೂಲಕ ಹಿಂದೂ ಉತ್ತರಾಧಿಕಾರ ಕಾಯ್ದೆಯ ಅಂಶಗಳನ್ನು ಇತರ ಧರ್ಮಗಳ ಮೇಲೂ ಹೇರಲಾಗುತ್ತಿದೆ ಎಂಬ ಆರೋಪವನ್ನೂ ಮಾಡಿದರು.
ಇದರ ನಡುವೆ, ಗುಜರಾತ್ ಸರ್ಕಾರ ಯುಸಿಸಿ ಜಾರಿಗೆ ಮುಂದಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ.
ಸರ್ಕಾರ ಸಮಾನ ಹಕ್ಕು ಮತ್ತು ಸಮಾನ ಕಾನೂನು ಎಂಬ ಕಾರಣ ನೀಡಿ ಮಸೂದೆಯನ್ನು ಸಮರ್ಥಿಸುತ್ತಿದ್ದರೆ, ವಿರೋಧ ಪಕ್ಷಗಳು ಮತ್ತು ಕೆಲವು ಸಾಮಾಜಿಕ ಸಂಘಟನೆಗಳು ಇದನ್ನು ಅಲ್ಪಸಂಖ್ಯಾತರ ಹಕ್ಕುಗಳಿಗೆ ಧಕ್ಕೆ ಎಂದು ಟೀಕಿಸುತ್ತಿವೆ.ಈ ಕುರಿತು ಕೇಂದ್ರ ಸರ್ಕಾರ ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡದಿದ್ದರೂ, ಯುಸಿಸಿ ಕುರಿತ ಚರ್ಚೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
















