ಚಿತ್ರದುರ್ಗ. ಸೆ.08: ಮೊಬೈಲ್ ಹಾಗೂ ಕಂಪ್ಯೂಟರ್ ಯುಗದಲ್ಲಿ ದೈಹಿಕ ಶ್ರಮ ಕಡಿಮೆಯಾಗುತ್ತಿದ್ದು, ಕ್ರೀಡೆಗಳಲ್ಲಿ ಭಾಗವಹಿಸುವ ಮನೋಭಾವನೆ ಕಡಿಮೆಯಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್. ಮಂಜುನಾಥ್ ಹೇಳಿದರು.
ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಯ ಕ್ರೀಡಾಕೂಟವನ್ನು ಹಾಯ್ಕಲ್ ಗ್ರಾಮದ ಶ್ರೀಮತಿ ಯಶೋದರಮ್ಮ ಬೋರಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಯಾವುದಾದರೂ ಒಂದು ಕ್ರೀಡೆಯಲ್ಲಿ ಆಸಕ್ತಿ ಮೂಡಿಸಿಕೊಂಡು, ಕೌಶಲ್ಯ ಬೆಳಸಿಕೊಂಡು ದೈಹಿಕ ಶ್ರಮದ ಅಭ್ಯಾಸ ಮಾಡಬಹುದು. ಇದರಿಂದ ಉತ್ತಮ ಸಮಾಜವನ್ನು ನಿರ್ಮಿಸಬಹುದು. ಶಾಲೆಯಲ್ಲಿ ಮಾನಸಿಕ ಚಟುವಟಿಕೆಗಳೊಂದಿಗೆ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿಯಾಗಲಿವೆ ಎಂದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ ಮಾತನಾಡಿ, ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದರಿಂದ ರೋಗಗಳಿಂದ ಮುಕ್ತವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಗಿರಿಜಾ, ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್, ಸಂದೀಪ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಶಿವಣ್ಣ, ತಾಲ್ಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ನಿಜಲಿಂಗಪ್ಪ, ಜಿಲ್ಲಾ ದೈಹಿಕ ಶಿಕ್ಷಕ ಸಂಘದ ಕಾರ್ಯದರ್ಶಿ ಕಲ್ಲೇಶ್ ಮೌರ್ಯ ಸೇರಿದಂತೆ ಗ್ರಾಮದ ಮುಖಂಡರು, ಶಿಕ್ಷಕರು ಇದ್ದರು.
ಕೂನಬೇವು ಸರ್ಕಾರಿ ಪ್ರೌಢ ಶಾಲೆಯ ಬಾಲಕರ ಕಬಡ್ಡಿ ತಂಡಕ್ಕೆ ಪ್ರಥಮ ಸ್ಥಾನ: ತುರುವನೂರು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಕೂನಬೇವು ಸರ್ಕಾರಿ ಪ್ರೌಢಶಾಲೆಯ ಬಾಲಕರ ಕಬಡ್ಡಿ ತಂಡವು ಪ್ರಥಮ ಸ್ಥಾನ ಪಡೆಯಿತು.
ತಂಡದ ಸಾಧನೆಗೆ ಮುಖ್ಯೋಪಾಧ್ಯಾಯರಾದ ಎಸ್. ಹನುಮಂತಪ್ಪ, ಎಸ್ಡಿಎಂಸಿ ಅಧ್ಯಕ್ಷ ಒಬಯ್ಯ ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುವ ಈ ತಂಡವು ಉತ್ತಮವಾಗಿ ತರಬೇತಿ ಪಡೆದು ಜಿಲ್ಲಾ ಹಾಗೂ ರಾಜ್ಯ ಮಟ್ಟಕ್ಕೂ ಆಯ್ಕೆಯಾಗಲಿ ಎಂದು ಆಶಿಸಿದರು.











