ದಾವಣಗೆರೆ : ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಗುರಿಯಾಗಿಸಿಕೊಂಡು ಉಗ್ರರು ಸಂಚು ರೂಪಿಸಿದ್ದಾರೆಯೇ ಎಂಬ ಶಂಕೆಯ ಹಿನ್ನೆಲೆಯಲ್ಲಿ ನಡೆಯುತ್ತಿರುವ ತನಿಖೆಗೆ ಮಹತ್ವದ ತಿರುವು ಸಿಕ್ಕಿದೆ. ಈ ಸಂಬಂಧ ಹರಿಹರದಲ್ಲಿ ಶಂಕಿತ ಉಗ್ರನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಉತ್ತರ ಪ್ರದೇಶ ಮೂಲದ ಸುಹೇಲ್ ಎಂಬಾತನನ್ನು ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿದ್ದು, ಆತ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಅನುಮಾನದ ಮೇಲೆ ತನಿಖೆ ಮುಂದುವರಿದಿದೆ. ಕೇಂದ್ರ ಗುಪ್ತಚರ ಸಂಸ್ಥೆಗಳ ಮಾಹಿತಿ ಆಧರಿಸಿ ನಡೆದ ಕಾರ್ಯಾಚರಣೆಯಲ್ಲಿ ಆತನನ್ನು ಬಂಧಿಸಲಾಗಿದೆ.
ತನಿಖಾ ಮೂಲಗಳ ಪ್ರಕಾರ, ಸಾಮಾಜಿಕ ಜಾಲತಾಣಗಳು ಹಾಗೂ ಆನ್ಲೈನ್ ಸಂಪರ್ಕಗಳ ಮೂಲಕ ಕೆಲ ಅನುಮಾನಾಸ್ಪದ ವ್ಯಕ್ತಿಗಳೊಂದಿಗೆ ಆತ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನ ಮೊಬೈಲ್, ಡಿಜಿಟಲ್ ಸಾಧನಗಳು ಹಾಗೂ ಸಂಪರ್ಕ ಜಾಲದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಮತ್ತಷ್ಟು ವಿಸ್ತರಿಸಿರುವ ಭದ್ರತಾ ಸಂಸ್ಥೆಗಳು, ಯಾವುದೇ ವಿಧ್ವಂಸಕ ಕೃತ್ಯದ ಸಂಚು ಇತ್ತೇ ಎಂಬ ಬಗ್ಗೆ ಎಲ್ಲ ಆಯಾಮಗಳಿಂದ ಮಾಹಿತಿ ಕಲೆಹಾಕುತ್ತಿವೆ. ದೇಶದ ಪ್ರಮುಖ ಧಾರ್ಮಿಕ ಹಾಗೂ ಸೂಕ್ಷ್ಮ ಪ್ರದೇಶಗಳ ಭದ್ರತೆಯ ಮೇಲೂ ವಿಶೇಷ ನಿಗಾ ವಹಿಸಲಾಗಿದೆ.ಆರೋಪಗಳ ಕುರಿತು ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಅಧಿಕಾರಿಗಳ ಅಧಿಕೃತ ವರದಿ ಬಳಿಕವೇ ಸಂಪೂರ್ಣ ಚಿತ್ರಣ ಸ್ಪಷ್ಟವಾಗಲಿದೆ.








